ಮುಖ್ಯ ಪುಟ > ವಿವಿಧ > ವೆಬ್‌ದುನಿಯಾ ವಿಶೇಷ 08 > ದೀಪಾವಳಿ-08 > ತುಳುನಾಡ ಬಲಿಯೇಂದ್ರ ಬರುವ ಕಥೆ ಹೀಗೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ತುಳುನಾಡ ಬಲಿಯೇಂದ್ರ ಬರುವ ಕಥೆ ಹೀಗೆ
- ಭುವನ್ ಪುದುವೆಟ್ಟು
PTI
ಆಟಿಡ್ ಬರ್ಪುಂಡು ಆನೆಂತಿ ಸಂಕ್ರಾಂತಿ
ಸೋಣೊಡು ಬರ್ಪುಂಡು ಗೌರಿ ಚೌತಿ
ನಿರ್ನಾಳೊಡು ಬರ್ಪುಂಡು ಒಂರ್ಬ ದಿನೊತ ಮಾರ್ಣೆಮಿ ಉತ್ಸವ
ಬೊಂತ್ಯೊಳುಡು ಬರ್ಪುಂಡು ದೀಪಾವಳಿ ಪರ್ಬ
ಮುಪ್ಪೊ ದಿನೊತ ಪುರದಕ್ಷಿಣೆ, ಮೂಜಿ ದಿನೊತ ಪೂವೊಡರ್
ಆವೂರ ಪೊಲಿ ಕೊಂಡೇ, ಈ ಊರಾ ಬಲಿ ಕೊಂಡೋಲೆ
ಅರಿಯರಿಯೆ ಬಲಿಯೇಂದ್ರ... ಅರಿಯರಿಯೆ...
(ಮುಂದುವರಿಯುತ್ತದೆ)

ಹೀಗೆ ತುಳುನಾಡಿನ ಅತಿ ದೊಡ್ಡ ಸಂಭ್ರಮದ ಹಬ್ಬವಾಗಿರುವ ದೀಪಾವಳಿ ಪರ್ಬದ ಸಾಂಪ್ರದಾಯಿಕ ಪಾಡ್ದನವಿದು. ಬಲಿಚಕ್ರವರ್ತಿಯನ್ನು ನಾಡಿಗೆ ಆಹ್ವಾನಿಸಿ ದೀಪ ಬೆಳಗಿಸಿ ಆರಾಧಿಸುವ ಪದ್ಧತಿ ಆರಂಭವಾದ ಬಗೆಯನ್ನು ಮುಂದಕ್ಕೆ ತಿಳಿದುಕೊಳ್ಳೋಣ ಬನ್ನಿ...

ರಾಕ್ಷಸಕುಲದಲ್ಲಿ ಹುಟ್ಟಿದವ ಬಲಿ ಚಕ್ರವರ್ತಿ. ಹಿರಣ್ಯಕಶಿಪು-ಹಿರಣ್ಯಾಕ್ಷರ ವಂಶ. ಆದರೂ ಬಲಿಯೇಂದ್ರ ಸದ್ಗುಣ-ಸಚ್ಛಾರಿತ್ರ್ಯವಂತ. ವೀರೋಚನಾ, ದೇವಾಂಬರ ಪುತ್ರನಾದ ಬಲಿಯು ಪ್ರಹ್ಲಾದನ ಮೊಮ್ಮಗನೂ ಹೌದು. ಪ್ರಹ್ಲಾದನ ಪ್ರಭಾವದಿಂದ ಈತ ವಿಷ್ಣು ಭಕ್ತನಾದ. ದಾನ ಶ್ರೇಷ್ಠನಾದ ಬಲಿಯೇಂದ್ರ ತುಳುನಾಡಿನ ಅರಸನಾಗಿದ್ದ ಎಂಬುದು ಪ್ರತೀತಿ. ಈತನ ಪತ್ನಿಯೇ ವಿಂದ್ಯಾವಳಿ. ಧರ್ಮನಿಷ್ಠನಾಗಿ ಪ್ರಜೆಗಳ ಕಷ್ಟ ಸುಖಗಳನ್ನು ಗಮನಿಸುತ್ತಾ ಆಡಳಿತ ನಡೆಸಿದವನೀತ. ಬೆಳಿಗ್ಗೆ ಬಿತ್ತಿದರೆ ಸಂಜೆ ಕೊಯ್ಲು ಮಾಡುವ ಸತ್ಯಕಾಲವದು. ಆಗ ದಿನಂಪ್ರತಿ ಹೊಸ ಅಕ್ಕಿ ಊಟ, ಹಬ್ಬಗಳು ನಡೆಯುತ್ತಿದ್ದವು. ಎಲ್ಲರೂ ಧರ್ಮಿಷ್ಠರಾಗಿದ್ದರು.

ಹೀಗಿರುವಾಗ ಆತ "ನಾಮಂದ ಸುದೆ ಬರಿಟ್ ಹೋಮಂದ ಶಾಲೆ"ಯನ್ನು (ನಾಮಂದ ನದಿ ತಟದಲ್ಲಿ ಹೋಮದ ಶಾಲೆ) ಕಟ್ಟಿ, ಅಲ್ಲಿ ಕಲಿಯುಗದ ಶೀಘ್ರ ಆರಂಭಕ್ಕಾಗಿ ಜಪ-ತಪ, ಯಾಗ-ಯಜ್ಞಾದಿಗಳನ್ನು ಆರಂಭಿಸಿದ. ದಿನಂಪ್ರತೀ ಮಡಿಯುಟ್ಟು ದಾನ-ಧರ್ಮ, ಪೂಜಾ ಕೈಂಕರ್ಯಗಳಲ್ಲಿ ಬಲಿಯೇಂದ್ರ ದಂಪತಿ ನಿರತರಾಗುತ್ತಿದ್ದರು. ಅರಸು-ಬಲ್ಲಾಳ, ಮಂತ್ರಿ-ಮಾದಿಗ, ಬ್ರಾಹ್ಮಣ-ಕ್ಷತ್ರಿಯ-ವೈಶ್ಯ-ಶೂದ್ರ, ಊರು ಕೇರಿಗಳ ಬಡವ-ಬಲ್ಲಿದರನ್ನು ಕುಲ-ನೆಲ ಬೇಧವಿಲ್ಲದೆ ಕಲಿಯುಗವನ್ನು ಶೀಘ್ರ ಸ್ಥಾಪಿಸುವ ಯಾಗಕ್ಕಾಗಿ ತುಳುನಾಡಿಗೆ ಆಹ್ವಾನಿಸುತ್ತಿದ್ದ ಚಕ್ರವರ್ತಿ.

ರಾಕ್ಷಸಕುಲಜ ಇಂತಹಾ ಯಾಗ-ಯಜ್ಞಾದಿಗಳನ್ನು ನಡೆಸುವುದೆಂದರೇನು? ದೇವತೆಗಳಿಗೆ ಚಿಂತೆ ಆರಂಭವಾಗಿತ್ತು. ಬಲೀಂದ್ರ ಧರ್ಮಿಷ್ಠ ಬೇರೆ. ಅದಲ್ಲದೇ ಆತ ನಡೆಸುತ್ತಿರುವ ಯಾಗ ಕಲಿಯನ್ನು ಭೂಲೋಕ್ಕೆ ಬೇಗನೆ ಕರೆಸಿಕೊಳ್ಳುವಂತಹುದು. ಹಾಗಾಗಬಾರದು ಎಂದುಕೊಂಡ ದೇವತೆಗಳೆಲ್ಲ ಒಟ್ಟು ಸೇರಿ ಸಂಚು ಮಾಡಿ ದೇವಲೋಕದಲ್ಲಿದ್ದ ಕಲಿಯನ್ನು ಹಿಡಿದು ತಲೆ ಕೆಳಗೆ ಮಾಡಿ ಕಟ್ಟಿಹಾಕಿ ಬಂಧನದಲ್ಲಿಟ್ಟರು.

ಆಗ ಕಲಿಯ ಆರ್ಭಟ ಶುರುವಾಯಿತು. ಮೂರು ಲೋಕ ಬಿರಿಯುವಂತೆ ಅರಚಲು ಶುರುವಿಟ್ಟುಕೊಂಡ ಕಲಿಯ ಆರ್ತನಾದ ಬಲಿಯೇಂದ್ರನ ಕರ್ಣಪಟಲಕ್ಕೂ ಬಡಿಯಿತು. ನೋವಿನಿಂದ ಚೀರುತ್ತಿರುವ ಕಲಿಯ ಕೂಗನ್ನು ಅರಗಿಸಿಕೊಳ್ಳಲಾಗದ ಬಲಿ ತಕ್ಕ ಉತ್ತರ ಕೊಡಲು ಸಿದ್ಧನಾದ. ಈ ಅನಾಹುತಕ್ಕೆ ಕಾರಣರಾದವರು ದೇವತೆಗಳಾದ ಕಾರಣ ಅವರನ್ನೇ ಹಿಡಿದು ಕಿರುಕುಳ ಕೊಡಲಾರಂಭಿಸಿದ. ಚಿತ್ರಹಿಂಸೆ ತಾಳಲಾರದ ಇಂದ್ರಲೋಕಾಧಿಪತಿ ದೇವೇಂದ್ರನ ಸಹಿತ ದೇವತೆಗಳು ಕೊನೆಗೆ ಶ್ರೀಮನ್ನಾರಾಯಣನ ಮೊರೆ ಹೋದರು. ಬಲಿ ನಡೆಸುತ್ತಿರುವ ಯಾಗದ ಪೂರ್ಣಾಹುತಿ ತಡೆದು, ತಮಗಾಗುತ್ತಿರುವ ತೊಂದರೆಯನ್ನು ನಿವಾರಿಸುವಂತೆ ಭಿನ್ನವಿಸಿಕೊಂಡ ದೇವತೆಗಳು ವಿಷ್ಣುವಿನ ಅಭಯಹಸ್ತ ಪಡೆದು ನಿರಾಳರಾದರು.

ಬಲಿಯೇಂದ್ರ ಧರ್ಮಿಷ್ಠನಾದ ಕಾರಣ ಆತನನ್ನು ಮಣಿಸುವ ದಾರಿ ಕೂಡಾ ಧರ್ಮಯುತವಾಗಿಯೇ ಇರಬೇಕು. ಚಕ್ರವರ್ತಿ ದಾನ ಧರ್ಮದಲ್ಲಿ ಶ್ರೇಷ್ಠ ಎಂದು ಪ್ರಸಿದ್ಧಿಯಾಗಿದ್ದರಿಂದ ಆ ಮೂಲಕವೇ ಕಾರ್ಯ ಸಾಧನೆಗೆ ವಿಷ್ಣು ಅನುವಾದ.

ಕಚ್ಚೆಯುಟ್ಟ ಮಡಿವಂತ, ಕೈಯಲ್ಲೊಂದು ತೀರ್ಥ ಚೊಂಬು-ಊರುಗೋಲು, ಮತ್ತೊಂದು ಕೈಯಲ್ಲಿ ಪಣೆ ಛತ್ರ, ಮೈಯೆಲ್ಲಾ ನಾಮ ಬಳಿದು ಜುಟ್ಟನಿಟ್ಟ ಬಡಬ್ರಾಹ್ಮಣ ಬಾಲಕನ ವೇಷಧಾರಿಯಾಗಿ ಭೂಲೋಕಕ್ಕೆ ಕಾಲಿಟ್ಟ ಶ್ರೀಮನ್ನಾರಾಯಣ. ವಾಮನರೂಪೀ (ವಿಷ್ಣುವಿನ 5ನೇ ಅವತಾರ) ಬ್ರಾಹ್ಮಣಶ್ರೇಷ್ಠನನ್ನು ಕಂಡು ಹರ್ಷಗೊಂಡ ಬಲಿ ಚಕ್ರವರ್ತಿ ದಂಪತಿಗಳು ಭಕ್ತಿಯಿಂದ ವಿವಿಧೋಪಚಾರಗಳಲ್ಲಿ ನಿರತರಾದರು.

ಬಾಲ ಬ್ರಾಹ್ಮಣನ ಕಾಲು ತೊಳೆದು ತೀರ್ಥವೆಂದು ಸ್ವೀಕರಸಿದರು ಬಲಿ ದಂಪತಿಗಳು. ಎಡಬಲ ನಂದಾದೀಪ ಬೆಳಗಿಸಿ ಭಕ್ತಿ ಮೆರೆದರು. ಆಯಾಸ ಬಾಯಾರಿಕೆ ನೀಗಿಸಿದ ಬಲಿಯು ಬ್ರಾಹ್ಮಣನನ್ನು - "ದೂರದಿಂದ ಬಂದಂತಿದೆ.. ಬಂದ ವಿಷಯ ಏನು? ಯಾವ ಊರಿನಿಂದ ಬಂದಿದ್ದೀರಿ? ನಿಮ್ಮ ಸಂಸಾರ ಎಲ್ಲಿ.. ಹೇಗಿದ್ದಾರೆ? ಸೌಖ್ಯದಿಂದಿರುವರೇ? ಸುಖಕ್ಕೇನಾದರೂ ಕೊರತೆಯಿದೆಯೇ? ನೀವು ಸಂತೋಷವಾಗಿದ್ದೀರಿ ತಾನೇ?" ಹೀಗೆ ವಿಚಾರಿಸಿದ.

ಸೇವೆಯಿಂದ ಸಂತುಷ್ಟನಾದ ಬ್ರಾಹ್ಮಣ - ನನಗೆ ಹೋದಲೆಲ್ಲಾ ಊರು, ಸಂಸಾರ ಎಲ್ಲಿ ಎಂದು ಪ್ರಶ್ನಿಸಿದ್ದೀಯಾ... ನನಗೆ ಊರೇ ಸಂಸಾರ. ನೀನು ದಾನ ಶ್ರೇಷ್ಠನೆಂದು ಕೇಳಿಪಟ್ಟೆ. ಅದರಾಸೆಯಿಂದ ಬಂದಿದ್ದೇನೆ ಎಂದು ಉತ್ತರಿಸಿದ.

ನಿಮಗೇನು ಬೇಕು ಹೇಳಿ... ಧನ ಕನಕ ಬೇಕೇ, ಗೋದಾನ, ಭೂದಾನ ಪಡೆಯುವಿರೇ, ಬಾಳೆ-ತೆಂಗು, ಬೆಳೆ-ನೆಲೆ, ಕಂಬಳ ಏನು ಬೇಕು ಸ್ವಾಮೀ.. ಕೇಳಿ.. ಹೀಗೆ ಅತ್ಯಂತ ಗೌರವಪೂರ್ವಕವಾಗಿ ಬ್ರಾಹ್ಮಣನನ್ನು ಭಿನ್ನವಿಸಿಕೊಂಡ ರಾಕ್ಷಸಕುಲದ ಧರ್ಮಿಷ್ಠ ತುಳುನಾಡಿನ ಚಕ್ರವರ್ತಿ ಬಲೀಂದ್ರ.

ನೀನು ಧನ-ಕನಕ-ಬೆಳ್ಳಿ ಕೊಟ್ಟರೆ ಕಳ್ಳ-ಕಾಕರು ಕೊಂಡು ಹೋದಾರು. ಯಾರೂ ದಿಕ್ಕಿಲ್ಲದ ನನಗೆ ಸಂಪತ್ತು ಯಾಕೆ ಬೇಕು? ನನ್ನ ಆಸೆ ಈಡೇರಿಸುವ ಭಾಷೆ ಕೊಡುವಿಯಾದರೆ ಮೂರು ಹೆಜ್ಜೆ ಭೂಮಿ ಕೊಡು. ಸಂತೋಷದಿಂದ ಸ್ವೀಕರಿಸಿ ಮರಳುವೆ ಎಂದ ವಾಮನ.

ಯಕಶ್ಚಿತ್ ಮೂರು ಹೆಜ್ಜೆ ಭೂಮಿಯನ್ನಷ್ಟೇ ದಾನ ಕೇಳುತ್ತಿದ್ದೀರಾ? ಖಂಡಿತಾ ಕೊಡುತ್ತೇನೆಂದ ಬಲಿ.

ನಾಳೆ ಬೆಳಿಗ್ಗಿನ ಶುಭ ಮುಹೂರ್ತದಲ್ಲಿ ದಾನ ಪಡೆಯುವೆ. ಸಿದ್ಧನಾಗು ಎಂದ ಬ್ರಾಹ್ಮಣ ಅರಮನೆಯಿಂದ ಹೊರಟು ಹೋದ.

ಅಷ್ಟರಲ್ಲಿ ದಾನವಗುರು ಶುಕ್ರಾಚಾರ್ಯನಿಗೆ ಈ ವಿಚಾರ ತಿಳಿಯುತ್ತದೆ. ತನ್ನ ದಿವ್ಯದೃಷ್ಟಿಯಿಂದ ಎಲ್ಲವನ್ನೂ ತಿಳಿದುಕೊಂಡ ಶುಕ್ರಾಚಾರ್ಯನು ಬ್ರಾಹ್ಮಣನಿಗೆ ದಾನ ಮಾಡದಿರುವಂತೆ ಚಕ್ರವರ್ತಿಗೆ ಸಲಹೆ ಮಾಡುತ್ತಾನೆ. ಬಂದವನು ಬಾಲಬ್ರಾಹ್ಮಣ ರೂಪದ ನಾರಾಯಣ ಎಂದು ತಿಳಿ ಹೇಳುತ್ತಾನೆ. ಕೊಟ್ಟ ಮಾತಿಗೆ ತಪ್ಪಲಾರೆನೆಂದ ಬಲಿ ಮರುದಿನ ಮಾಡಲಿರುವ ದಾನಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಾನೆ.

ಮುಂದುವರಿದಿದೆ ಪುಟ 2
ಸಂಬಂಧಿತ ಮಾಹಿತಿ ಹುಡುಕಿ
1 | 2  >>