ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಮೊದಲ ಸುತ್ತಿನ ಮಂತ್ರಿ ಮಂಡಲದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರೊಬ್ಬರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಚುನಾವಣಾ ಕಚೇರಿಯಲ್ಲಿ ಇಂದು (ಬುಧವಾರ) ಮಾತನಾಡಿದ ಅವರು, ತಾವು ಈ ಹಿಂದೆ ಹಣಕಾಸು ಸಚಿವರಾಗಿದ್ದಾಗ ಮಂಡಿಸಿದ ಎರಡು ಜನಪರ ಬಜೆಟ್ನಲ್ಲಿ ಮುಸ್ಲಿಂ ಹಾಗೂ ಇತರೆ ಅಲ್ಪಸಂಖ್ಯಾತರಿಗೆ ಯಾವುದೇ ದ್ರೋಹವಾಗದೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಧ್ಯೇಯದೊಂದಿಗೆ ಎಲ್ಲ ವರ್ಗದವರನ್ನು ಸ್ಪರ್ಶಿಸಿದ್ದೇವೆ ಎಂದು ತಿಳಿಸಿದರು.
ಶಿಕಾರಿಪುರ ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಬಂಗಾರಪ್ಪ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಬಂಗಾರಪ್ಪನವರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿರೋಧ ಪಕ್ಷಗಳ ವಿರುದ್ದ ತೀವ್ರ ವಾಗ್ದಾಳಿ ಮುಂದುವರೆಸಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಳ್ಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೆ ಬುಡಮೇಲೆ ಮಾಡಲು ಹೊರಟಿದ್ದು, ಇವರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ತಿಳಿಸಿದರು.
|