ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಓಲೈಸಿ ಪಕ್ಷದಲ್ಲೇ ಉಳಿಸಿಕೊಳ್ಳುವ ಕುರಿತು ಸೋಮವಾರ ಸಂಜೆ ನಡೆದ ಆತ್ಮಾವಲೋಕನ ಸಭೆಯಲ್ಲಿ ಕಾಂಗ್ರೆಸ್ ನಿರ್ಧರಿಸಿರುವುದಾಗಿ ತಿಳಿಸಿದೆ.
ವಿಧಾನಸಭೆ ಉಪ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕೆಪಿಸಿಸಿ ನಗರದಲ್ಲಿ ಸೋಮವಾರ ಕರೆದಿದ್ದ ಆತ್ಮಾವಲೋಕನ ಸಭೆಯಲ್ಲಿ ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿದರೆ ಕಾಂಗ್ರೆಸ್ ಮೇಲೆ ಉಂಟಾಗುವ ಪರಿಣಾಮದ ಬಗ್ಗೆ ಸಾಕಷ್ಟು ಚರ್ಚೆ ನಡೆಯಿತು. ಹೆಚ್ಚಿನವರು ಪಕ್ಷಕ್ಕೆ ಸಿದ್ದರಾಮಯ್ಯ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಕೆಲವರು ಸಿದ್ದು ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿದರೂ ಬಹುಮತ ಸಿದ್ದು ಪರವಾಗಿತ್ತು. ಮಾಜಿ ಸಚಿವ ಎಚ್.ವಿಶ್ವನಾಥ್ ಸಹಿತ ಹಲವರು ಸಿದ್ದರಾಮಯ್ಯನವರನ್ನು ಎಐಸಿಸಿ ಕೇಂದ್ರ ಕಾರ್ಯಕಾರಿಣಿ ಸದಸ್ಯರನ್ನಾಗಿ ಮಾಡಬೇಕು. ಸೂಕ್ತ ಸ್ಥಾನಮಾನ ನೀಡುವ ಮೂಲಕ ಪಕ್ಷ ಸಂಘಟನೆಗೆ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನಿರೀಕ್ಷೆಯಂತೆ ಸಿದ್ದರಾಮಯ್ಯ ಸಭೆಗೆ ಗೈರು ಹಾಜರಾಗಿದ್ದು, ಅವರು ಬೆಂಬಲಿಗರಾದ ಸಿ.ಎಂ.ಇಬ್ರಾಹಿಂ, ಕೋದಂಡರಾಮಯ್ಯ, ಡಾ.ಎಚ್.ಸಿ.ಮಹದೇವಪ್ಪ ಭಾಗವಹಿಸಿದ್ದರು.
ಸಿದ್ದರಾಮಯ್ಯ ಕಾಂಗ್ರೆಸ್ ತೊರೆಯಲ್ಲ. ಹೊಸ ಪಕ್ಷ ಕಟ್ಟಲ್ಲ. ಪ್ರಚಾರದಿಂದ ದೂರ ಉಳಿದ ನೆಪ ಬಳಸಿಕೊಂಡು ಈ ವದಂತಿ ಹಬ್ಬಿಸಲಾಗಿದೆ ಎಂದು ಸಿ.ಎಂ.ಇಬ್ರಾಹಿಂ ಸುದ್ದಿಗಾರರಿಗೆ ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲ ಅವರೇ ಪ್ರಚಾರದ ಮುಂದಾಳುತ್ವ ವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದೇಶಪಾಂಡೆ ತಿಳಿಸಿದರು.
|