ಮಂಗಳೂರಿನ ಪಬ್ ದಾಳಿ ಘಟನೆಯನ್ನು ರಾಜಕೀಯಕರಣಗೊಳಿಸಲಾಗುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಶ್ರೀರಾಮ ಸೇನೆಯನ್ನು ನಿಷೇಧಿಸುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ.
ಬಿಜೆಪಿ ಪರಿವಾರಕ್ಕೂ ಶ್ರೀರಾಮಸೇನೆಗೂ ಯಾವುದೇ ಸಂಬಂಧವಿರದಿದ್ದರೂ, ವಿರೋಧ ಪಕ್ಷಗಳು ಈ ಘಟನೆಗೆ ರಾಜಕೀಯ ಬಣ್ಣ ನೀಡುತ್ತಿವೆ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡುತ್ತ ಆಪಾದಿಸಿದರು.
ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ವಾಸ್ತವಾಂಶಗಳನ್ನು ಅರಿಯದೇ ರಾಜಕೀಯ ಹೇಳಿಕೆ ನೀಡುವ ಮೂಲಕ ಪ್ರಕರಣವನ್ನು ರಾಜಕೀಯಕರಣಗೊಳಿಸುತ್ತಿವೆ ಎಂದ ಅವರು, ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ.
ಈ ಘಟನೆಗೆ ಕಾರಣವಾದ ಶ್ರೀರಾಮಸೇನೆಯನ್ನು ನಿಷೇಧಿಸುವಿರಾ?ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಂಘಟನೆಯನ್ನು ನಿಷೇಧಿಸುವುದು ಸಮಸ್ಯೆಗೆ ಪರಿಹಾರ ಅಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು. |