ಪ್ರಧಾನಿ ಮನಮೋಹನ್ ಸಿಂಗ್ ಅವರತ್ತ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಶೂ ಎಸೆಯುವ ಯತ್ನ ನಡೆಸಿದ ಘಟನೆಯ ಬೆನ್ನಲ್ಲೇ, ರಾಜಕಾರಣಿಗಳ ಮೇಲೆ ಶೂ, ಚಪ್ಪಲಿ ಎಸೆಯುವ ಪಿಡುಗು ಇದೀಗ ರಾಜ್ಯಕ್ಕೂ ಹಬ್ಬಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರತ್ತ ವ್ಯಕ್ತಿಯೊಬ್ಬ ಚಪ್ಪಲಿ ಎಸೆಯುವ ಯತ್ನ ನಡೆಸಿದ ಘಟನೆ ಮಂಗಳವಾರ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಚನ್ನರಾಯಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಲೋಕಸಭಾ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಸಮಾವೇಶದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಹಾಗೂ ರೇವಣ್ಣ ವಿರುದ್ಧ ಟೀಕಾಪ್ರಹಾರ ನಡೆಸಿದ ಸಂದರ್ಭದಲ್ಲಿ ಅಸಮಾಧಾನಗೊಂಡ ಚಂದ್ರಶೇಖರ್, ದೇವೇಗೌಡರಿಗೆ ಜೈ ಎಂಬ ಘೋಷಣೆ ಕೂಗಿ ಚಪ್ಪಲಿ ಎಸೆಯುವ ಯತ್ನ ನಡೆಸಿದ್ದ.ಮುಖ್ಯಮಂತ್ರಿಗಳ ಮೇಲೆ ಚಪ್ಪಲಿ ಎಸೆಯುವ ಯತ್ನ ನಡೆಸಿದ ಆರೋಪಿ ಚಂದ್ರಶೇಖರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಆರೋಪಿ ಕೋಡಿಹಳ್ಳಿ ನಿವಾಸಿಯಾಗಿದ್ದು, ಆತನ ವಿರುದ್ಧ ಭಾರತೀಯ ದಂಡ ಸಂಹಿತೆ 355, 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಗುಜರಾಜ್ನ ಅಹಮದಾಬಾದ್ನಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಶೂ ಎಸೆಯುವ ಯತ್ನ ನಡೆಸಿದ್ದ. ಪೊಲೀಸರು ಆತನನ್ನು ಬಂಧಿಸಿ, ನಂತರ ಬಿಡುಗಡೆಗೊಳಿಸಿದ್ದರು. ಈ ಘಟನೆಗೂ ಮುನ್ನ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರತ್ತ ಪತ್ರಕರ್ತ ಜರ್ನೈಲ್ ಸಿಂಗ್ ಕೂಡ ಶೂ ಎಸೆದಿದ್ದ. ನಂತರದ ಸರದಿ ಬಿಜೆಪಿ ಪ್ರಚಾರ ಸಭೆಯಲ್ಲಿ ಆಡ್ವಾಣಿ ಅವರತ್ತಲೂ ಚಪ್ಪಲಿ ಆಕಾರದ ವಸ್ತುವನ್ನು ಎಸೆದಿದ್ದ. |