ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ವಾರ್ಡ್ ಸಂಖ್ಯೆಯನ್ನು 147 ರಿಂದ 198ಕ್ಕೆ ಏರಿಸುವ ಸರ್ಕಾರದ ನಿರ್ಧಾರಕ್ಕೆ ರಾಜ್ಯಪಾಲ ರಾಮೇಶ್ವರ್ ಠಾಕೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಗ್ರಾಮೀಣ ಅಭಿವೃದ್ದಿ ಇಲಾಖೆಯ ಸಚಿವೆ ಶೋಭಾ ಕರಂದ್ಲಾಜೆ ಮಹಾನಗರ ಪಾಲಿಕೆಯ ವಾರ್ಡ್ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಆದರೆ ರಾಜ್ಯಪಾಲರಿಂದ ಈ ಆದೇಶಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ವಾರ್ಡ್ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿತ್ತು. ಈ ಆದೇಶದ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಿ ಕೊಡಲಾಗಿತ್ತು. ಆದರೆ ರಾಜ್ಯಪಾಲರು ವಾರ್ಡ್ ಸಂಖ್ಯೆಯನ್ನು ಹೆಚ್ಚಿಸುವ ಅವಶ್ಯವಾದರು ಏನಿತ್ತು ಎಂದು ಪ್ರಶ್ನಿಸಿ ಈ ಕುರಿತು ಸೂಕ್ತವಾಗಿ ಸ್ಪಂದಿಸಿಲ್ಲ ಎನ್ನಲಾಗಿದೆ.
ರಾಜ್ಯಪಾಲರು ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಇದರಿಂದ ನಗರಕ್ಕೆ ಯಾವ ರೀತಿ ಪ್ರಯೋಜನವಾಗುತ್ತದೆ? ಈ ಪ್ರಕ್ರಿಯೆಗೆ ಎಷ್ಟು ಕಾಲಾವಕಾಶ ಬೇಕೆಂದು ತಿಳಿಸಬೇಕು ಎಂದಿದ್ದಾರೆ. |