ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಓದಲು ಬಯಸಿ ಅರ್ಜಿ ಹಾಕಿದವರಿಗೆಲ್ಲ ಪ್ರವೇಶ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಅಧ್ಯಕ್ಷತೆಯಲ್ಲಿ ನಡೆದ ಶಿಕ್ಷಣ ಇಲಾಖೆಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ವರ್ಷದಿಂದಲೇ ಈ ಪದ್ಧತಿ ಜಾರಿಗೆ ಬರಲಿದೆ. ಇನ್ನು ಎರಡು ದಿನಗಳಲ್ಲಿ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.
ಇದುವರೆಗೆ ಆಯಾ ಸರ್ಕಾರಿ ಕಾಲೇಜಿನ ಮೂಲಸೌಕರ್ಯಗಳ ಆಧಾರದ ಮೇಲೆ ಕಾಲೇಜುಗಳಲ್ಲಿ ಪ್ರವೇಶ ಸಂಖ್ಯೆಯನ್ನು ನಿಗದಿ ಪಡಿಸಲಾಗುತ್ತಿತ್ತು. ಹೀಗಾಗಿ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶ ದೊರಕುತ್ತಿರಲಿಲ್ಲ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದರಿಂದ ಕಟ್ಟಡ ಹಾಗೂ ಉಪನ್ಯಾಸಕರ ಕೊರತೆ ಎದುರಾಗಬಾರದೆಂದು ಈಗಿರುವ ಕಾಲೇಜುಗಳಲ್ಲೇ ಎರಡು ಬ್ಯಾಚ್ಗಳಲ್ಲಿ ತರಗತಿ ನಡೆಸಲಾಗುವುದು ಎಂದರು.
ಅಲ್ಲದೇ ಡಾ. ನಂಜುಂಡಪ್ಪ ವರದಿ ಪ್ರಕಾರ ರಾಜ್ಯದ 39 ಅತಿ ಹಿಂದುಳಿದ ತಾಲೂಕಿನ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ವರ್ಷಕ್ಕೆ 10 ಸಾವಿರ ವಿದ್ಯಾರ್ಥಿ ವೇತನ ನೀಡಲು ಉನ್ನತ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಿದರು. |