ಅಂತೂ-ಇಂತೂ ಕೊನೆಗೂ ಹಿರಿಯ ಮುಖಂಡ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕನಾಗಿ ಭಾನುವಾರ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಬಹುದಿನಗಳ ಕನಸು ನನಸಾದಂತಾಗಿದೆ.ಭಾನುವಾರ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಪಕ್ಷದ ವರಿಷ್ಠ ಗುಲಾಂ ನಬೀ ಆಜಾದ್, ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷದ ನಾಯಕವಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಇದೀಗ ಪ್ರಪ್ರಥಮ ಬಾರಿಗೆ ಸಿದ್ದರಾಮಯ್ಯನವರು ಪ್ರತಿಪಕ್ಷ ನಾಯಕನ ಪಟ್ಟ ಅಲಂಕರಿಸಿದ್ದಾರೆ. ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಘೋಷಿಸುತ್ತಿದ್ದಂತೆಯೇ, ಕಚೇರಿಯ ಹೊರ ನೆರೆದಿದ್ದ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.ಕಳೆದ ಮೂರು ದಶಕಗಳಿಂದ ರಾಜ್ಯರಾಜಕಾರಣದಲ್ಲಿ ಸಕ್ರಿಯರಾಗಿರುವ ಸಿದ್ದರಾಮಯ್ಯ ಜನತಾಪರಿವಾರದಲ್ಲಿದ್ದು, ಬಳಿಕ ಮಾಜಿ ಪ್ರಧಾನಿ ದೇವೇಗೌಡರ ಮೇಲಿನ ಮುನಿಸಿನಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದರು. ಆದರೆ ಕಾಂಗ್ರೆಸ್ ತುಂಬಾ ಸಮಯದವರೆಗೂ ಸಿದ್ದರಾಮಯ್ಯನವರ ಬೇಡಿಕೆಯನ್ನು ಮುಂದೂಡತ್ತಲೇ ಬಂದಿತ್ತು. ತನ್ಮಧ್ಯೆ ವಿಪಕ್ಷ ನಾಯಕನ ಪಟ್ಟಕ್ಕೆ ಪಟ್ಟು ಹಿಡಿದಿದ್ದ ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿ ಇದ್ದೂ ಕೆಲವು ಸಭೆ, ಸಮಾರಂಭ, ಪ್ರಚಾರ ಕಾರ್ಯಗಳಿಗೆ ಗೈರು ಹಾಜರಾಗುವ ಮೂಲಕ ಅಸಮಧಾನವನ್ನು ಹೊರಹಾಕಿದ್ದರು. ನಂತರ ಲೋಕಸಭಾ ಚುನಾವಣೆಯಲ್ಲಿ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರನ್ನು ಗುಲ್ಬರ್ಗಾ ಲೋಕಸಭಾ ಕ್ಷೇತ್ರದಿಂದ ಸಂಸತ್ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ, ಸಿದ್ದರಾಮಯ್ಯನವರ ಆಯ್ಕೆಗೆ ಹಾದಿ ಸುಗಮವಾಗಿತ್ತು. |