ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ನ(ಬಿಎಂಐಸಿ) 'ನೈಸ್' ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಆರೋಪದ ಮೇಲೆಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಕರುಣಾಕರ ರೆಡ್ಡಿ, ನೈಸ್ ಕಂಪೆನಿ ಮುಖ್ಯಸ್ಥ ಅಶೋಕ್ ಖೇಣಿಗೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ನ ಕಾಮಗಾರಿಯಲ್ಲಿ ಹೈಕೋರ್ಟ್ ಆದೇಶ ಉಲ್ಲಂಘಿಸಿ ರಸ್ತೆ ಕಾಮಗಾರಿ ಮಾಡಿ ನ್ಯಾಯಾಂಗ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿರುವುದಾಗಿ ಹೈಕೋರ್ಟ್ ಪೀಠ ತಿಳಿಸಿದೆ.
ನೈಸ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಕರುಣಾಕರ ರೆಡ್ಡಿ, ನೈಸ್ ಕಂಪೆನಿಯ ಮುಖ್ಯಸ್ಥ ಅಶೋಕ್ ಖೇಣಿ ಸೇರಿದಂತೆ ಹಲವರ ವಿರುದ್ಧ ಉದ್ಯಮಿ ಎಚ್.ವಿ.ವಿಜಯರಾಘವನ್ ಸೋಮವಾರ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದರು.
ಗೊಟ್ಟಿಗೆರೆ ಕೆರೆಯ ಮಧ್ಯಭಾಗದಲ್ಲಿ ಪೆರಿಫೆರಲ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು, ಇದು ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದಂತೆ ಎನ್ನುವುದು ರಾಘವನ್ ಅವರ ವಾದ.
ಪರಿಸರವಾದಿ ಸುರೇಶ್ ಹೆಬ್ಳೀಕರ್ ಅವರ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ 'ಯಾವುದೇ ಕಾರಣಕ್ಕೂ ಕೆರೆಯನ್ನು ಸೀಳಿ ಅಲ್ಲಿ ಕಾಮಗಾರಿ ಮಾಡುವುದು ಸಲ್ಲದು' ಎಂದು ಹೈಕೋರ್ಟ್ 1999ರ ಜೂನ್ 16ರಂದು ಆದೇಶಿಸಿತ್ತು. ಆದರೆ ಈ ಆದೇಶವನ್ನು ಮೀರಿ ಈಗ ರಸ್ತೆ ನಿರ್ಮಾಣ ಆಗುತ್ತಿರುವುದು ನ್ಯಾಯಾಂಗ ನಿಂದನೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.