ಬರ ಸ್ಥಿತಿ; ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ದರಾಮಯ್ಯ ಕಿಡಿ
ಬೆಂಗಳೂರು, ಮಂಗಳವಾರ, 1 ಸೆಪ್ಟೆಂಬರ್ 2009( 17:46 IST )
NRB
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಲ್ಬರ್ಗಾದಲ್ಲಿ ಮಂಗಳವಾರ ಬರ ಪರಿಸ್ಥಿತಿ ಅವಲೋಕಿಸಿ ನಿರ್ವಹಣೆಯಲ್ಲಿ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಬಗ್ಗೆ ಪ್ರವಾಸ ಕೈಗೊಂಡಿರುವ ಅವರು, ಮಂಗಳವಾರ ಗುಲ್ಬರ್ಗಾದ ಹಲವೆಡೆ ಭೇಟಿ ನೀಡಿ ಬರ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು.
ರಾಜ್ಯದಲ್ಲಿ ಸಕಾಲದಲ್ಲಿ ಮಳೆಯಾಗದೆ ಬರಗಾಲ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿ ಕಾಡುತ್ತಿದೆ. ಸರ್ಕಾರ ಈ ಸಂದರ್ಭದಲ್ಲಿ ನೆರವಿಗೆ ಧಾವಿಸದೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ಬರ ಪರಿಸ್ಥಿತಿಯಿಂದ ಜನರು ಗುಳೆ ಹೋಗುತ್ತಿದ್ದಾರೆ. ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರ 153ಕೋಟಿ ರೂಪಾಯಿಗಳನ್ನು ನೀಡಿದೆ.
ಕಳೆದ ಬಾರಿ 120 ಕೋಟಿ ರೂ.ಗಳನ್ನು ನೀಡಿತ್ತು. ಆದರೆ, ರಾಜ್ಯ ಸರ್ಕಾರದ ಒಂದು ಪೈಸೆಯನ್ನೂ ಇದಕ್ಕೆ ವ್ಯಯಿಸಿಲ್ಲ ಎಂದು ಗಂಭೀರ ಆರೋಪ ಮಾಡಿದರು. ರಾಜ್ಯದಲ್ಲಿ ಬರ ಮತ್ತು ನೆರೆ ಪರಿಸ್ಥಿತಿಗಳ ನಿರ್ವಹಣೆಗಾಗಿ ಕೇಂದ್ರ ಸರ್ಕಾರದ ನೆರವಿಗೆ ಒತ್ತಾಯಿಸುವುದಾಗಿ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಹೇಳಿದರು.