ಮತ್ತೆ ಮತ್ತೆ ಪ್ರವಾಹದ ಭೀತಿ ಎದುರಿಸುತ್ತಿರುವ ರಾಜ್ಯದ ಸುಮಾರ 219 ಗ್ರಾಮಗಳನ್ನು ಸ್ಥಳಾಂತರಿಸಲು ಸರ್ಕಾರವು ಚಿಂತನೆ ನಡೆಸಿದ್ದು, ಆದ್ಯತೆಯ ಅನುಸಾರ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.
ರಾಯಚೂರಿನ ಯರಮರಸ್ ಹೆಲಿಪ್ಯಾಡ್ಗೆ ಹೊಂದಿಕೊಂಡಂತಿರುವ ಜಿಲ್ಲಾ ತರಬೇತಿ ಕೇಂದ್ರದಲ್ಲಿ ರಾಜ್ಯದಲ್ಲಿನ ನೆರೆ ಪರಿಸ್ಥಿತಿ ಕುರಿತು ಪ್ರಧಾನಿ ಮನಮೋಹನ್ ಸಿಂಗ್ರವರು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿಯವರು ಈ ವಿಷಯವನ್ನು ತಿಳಿಸಿದ್ದು, ಈ ನಿಟ್ಟಿನಲ್ಲಿ ಶೀಘ್ರವೇ ಕೆಲಸ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
8-10 ದಿನಗಳ ಮಟ್ಟಿಗೆ ಪ್ರವಾಹಪೀಡಿತ ತಾಲ್ಲೂಕು ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಸಂತ್ರಸ್ತರೊಂದಿಗೆ ವಸ್ತುಸ್ಥಿತಿಯ ಕುರಿತು ಚರ್ಚಿಸುವುದಾಗಿ ಹೇಳಿದ ಮುಖ್ಯಮಂತ್ರಿಯವರು, ಅವರ ಸಮಸ್ಯೆಗಳ ಈಡೇರಿಕೆಗೆ ಸೂಕ್ತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿಯೂ ತಿಳಿಸಿದರು.
ಸದ್ಯಕ್ಕೆ 75 ಸಾವಿರ ಮನೆಗಳನ್ನು ನಿರ್ಮಿಸುವ ಹೊಣೆ ಸರ್ಕಾರದ ಮೇಲಿದ್ದು ಅದನ್ನು ಸವಾಲಾಗಿ ಸ್ವೀಕರಿಸಲಾಗಿದೆ. ಇದಕ್ಕೆ ಬೇಕಾದ ಜಮೀನನ್ನು ಕೆಲವೇ ದಿನಗಳಲ್ಲಿ ವಶಪಡಿಸಿಕೊಂಡು, ಬಡಾವಣೆಯ ನೀಲನಕಾಶೆಯನ್ನು ಸಿದ್ಧಪಡಿಸುವ ವ್ಯವಸ್ಥೆ ಮಾಡಲಾಗುವುದು ಹಾಗೂ ನಿರ್ಮಾಣದ ಕೆಲಸವನ್ನೂ ಪ್ರಾರಂಭಿಸಲಾಗುವುದು ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಪ್ರಕಟಿಸಿದರು.