ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಪಿ.ಡಿ ದಿನಕರನ್ ವಿರುದ್ಧ ನಗರದ ವಕೀಲರ ಸಂಘ ಮತ್ತೆ ನೇರ ಹೋರಾಟಕ್ಕೆ ಇಳಿದಿದೆ.
ದಿನಕರನ್ ಅವರು ನ್ಯಾಯಾಲಯದಲ್ಲಿನ ಕಲಾಪಗಳಲ್ಲಿ ಪಾಲ್ಗೊಳ್ಳುತ್ತಿರುವುದನ್ನು ಪ್ರತಿಭಟಿಸಿ ನವೆಂಬರ್ 9 ರ ಸೋಮವಾರ ಹೈಕೋರ್ಟ್ ಸೇರಿದಂತೆ ಬೆಂಗಳೂರಿನ ಎಲ್ಲಾ ನ್ಯಾಯಾಲಯಗಳಲ್ಲಿ ಕಲಾಪಗಳಿಂದ ದೂರ ಉಳಿಯಲು ವಕೀಲರ ಸಂಘ ನಿರ್ಧರಿಸಿದೆ.
ಆ ದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ವಕೀಲರು ಕಲಾಪದಿಂದ ದೂರ ಉಳಿಯುವಂತೆ ರಾಜ್ಯಾದ್ಯಂತ ಇರುವ ಎಲ್ಲಾ ವಕೀಲರ ಸಂಘಗಳಲ್ಲಿ ಬೆಂಗಳೂರು ವಕೀಲರ ಸಂಘ ಮನವಿ ಮಾಡಿಕೊಂಡಿದೆ.
ನಗರದ ಸಂಘದ ಅಧ್ಯಕ್ಷ ಕೆ.ಎನ್. ಪುಟ್ಟೇಗೌಡ ಅವರ ನೇತೃತ್ವದಲ್ಲಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.