ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಒಳ್ಳೆಯ ಸಂಘಟಕ ಹಾಗೂ ಹೋರಾಟಗಾರರು ಕೂಡ. ಆದರೆ, ಎಲ್ಲ ಶಾಸಕರನ್ನೂ ಒಟ್ಟಿಗೆ ಕರೆದೊಯ್ಯುವಲ್ಲಿ ಅವರು ವಿಫಲರಾಗಿದ್ದಾರೆ. ಮನೆಯ ಯಜಮಾನ ಅಂದ ಮೇಲೆ ಎಲ್ಲರನ್ನೂ ಪ್ರೀತಿ-ವಿಶ್ವಾಸದಿಂದ ಕಾಣಬೇಕು. ಆದರೆ ಮಾತನಾಡಿದ ತಕ್ಷಣ ಕೋಪಗೊಂಡರೆ ಕಷ್ಟ ಹೇಳಿಕೊಳ್ಳಲು ಕಷ್ಟ. ಇನ್ನಾದರೂ ಸಿಎಂ ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಬೇಕು ಎಂದು ಮಡಿಕೇರಿ ಬಿಜೆಪಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿನ ಸಮಸ್ಯೆಗೆ ಮೂಲ ಕಾರಣ ಏನೆಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಬಿಜೆಪಿಯಲ್ಲಿ ಉದ್ಭವಿಸಿದ ಬಿಕ್ಕಟ್ಟು ಪರಿಹರಿಸಲು ಪಕ್ಷದ ಹೈಕಮಾಂಡ್ ಕೈಗೊಳ್ಳಲು ಯಾವುದೇ ರೀತಿಯ ತೀರ್ಮಾನಕ್ಕೆ ನಾವು ಬದ್ಧ ಎಂದು ಅವರು ಸ್ಪಷ್ಟಪಡಿಸಿದರು.
ಬಿಜೆಪಿಯಲ್ಲಿನ ಗೊಂದಲವನ್ನು ಆದಷ್ಟು ಬೇಗ ಪರಿಹರಿಸುವಂತೆ ಪಕ್ಷದ ವರಿಷ್ಠರನ್ನು ಆಗ್ರಹಿಸಿದ್ದೇವೆ. ಆದರೆ ನಾವು ಯಾವುದೇ ಬಣದ ಪರ ವಕಾಲತ್ತು ವಹಿಸಿಲ್ಲ. ಬಿಜೆಪಿ ಉಳಿಯಬೇಕು ಮತ್ತು ಆದಷ್ಟು ಶೀಘ್ರ ಗೊಂದಲ ಬಗೆಹರಿಯಬೇಕು ಎಂಬುದು ನಮ್ಮ ಬೇಡಿಕೆ. ಸಮಸ್ಯೆಗೆ ಬಹುಶಃ ಒಂದೆರಡು ದಿನಗಳಲ್ಲಿ ಹೈಕಮಾಂಡ್ ಪರಿಹಾರ ಸೂತ್ರ ಕಂಡುಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.