ಮುಂಬರುವ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಮೈತ್ರಿಕೊಳ್ಳಲು ಮುಕ್ತ ಆಹ್ವಾನ ನೀಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಪಕ್ಷ ಸಿದ್ದವಾಗಿದೆ ಎಂದು ಹೇಳಿದರು.
ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಈ ಮೊದಲು ತಮ್ಮ ಪಕ್ಷ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಏಕಾಂಗಿಯಾಗಿಯೇ ಸ್ಪರ್ಧಿಸುವುದಾಗಿ ತಿಳಿಸಿದ್ದರು.
ಡಿಸೆಂಬರ್ 18ರಂದು ವಿಧಾನಪರಿಷತ್ನ 25ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೇಲ್ಮನೆಯ ಪ್ರತಿ ಪಕ್ಷದ ನಾಯಕ ವಿ.ಎಸ್. ಉಗ್ರಪ್ಪ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿದ್ದ 25 ಸದಸ್ಯರು ಜನವರಿ 5ರಂದು ನಿವೃತ್ತರಾಗುತ್ತಿದ್ದು, ಆ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಯಲಿದೆ.
ಚುನಾವಣಾ ನಡೆಯಲಿರುವ 25 ಸ್ಥಾನಗಳ ಪೈಕಿ 19 ಮಂದಿ ಕಾಂಗ್ರೆಸ್ ಸದಸ್ಯರು ನಿವೃತ್ತರಾಗುತ್ತಿದ್ದು, ಜೆಡಿಎಸ್ನಿಂದ ಒಂದು ಹಾಗೂ ಬಿಜೆಪಿಯ ನಾಲ್ಕು ಮಂದಿ ನಿವೃತ್ತರಾಗಲಿದ್ದಾರೆ.