ನೆರೆ ಸಂತ್ರಸ್ತರ ಪುನರ್ವಸತಿಗೆ ಕೇಂದ್ರದಿಂದ ಹೆಚ್ಚಿನ ನೆರವಿಗೆ ಸಂಬಂಧಿಸಿದಂತೆ, ರಾಜ್ಯಪಾಲರನ್ನು ನಿಯೋಗದಲ್ಲಿ ಕೊಂಡೊಯ್ಯುತ್ತೇವೆಂದು ಹೇಳುತ್ತಿರುವ ಮುಖ್ಯಮಂತ್ರಿಗಳ ಮಾತು ಉದ್ಧಟತನದಿಂದ ಕೂಡಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ವಿ.ಎಸ್. ಉಗ್ರಪ್ಪ ರಾಜ್ಯ ಸರ್ಕಾರದ ಮೇಲೆ ಮತ್ತೊಮ್ಮೆ ಟೀಕಾ ಪ್ರಹಾರ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ ಸಂಬಂಧದ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಮುಖ್ಯಮಂತ್ರಿಗಳು ಹಾಗೂ ಮಂತ್ರಿಮಂಡಲದ ಸದಸ್ಯರು ರಾಜ್ಯಪಾಲರಿಗೆ ತಿಳಿಸಬೇಕಾದ್ದು ಕರ್ತವ್ಯ. ಅದು ಬಿಟ್ಟು ರಾಜ್ಯಪಾಲರಿಗೆ ಯಾವುದೇ ಮಾಹಿತಿ ನೀಡದಿರುವುದು ಸರಿಯಲ್ಲ ಎಂದು ದೂರಿದ್ದಾರೆ.
ಅಲ್ಲದೆ, ರಾಜ್ಯಪಾಲರನ್ನು ನಿಯೋಗದಲ್ಲಿ ಕೊಂಡೊಯ್ಯುತ್ತೇವೆಂದು ಮುಖ್ಯಮಂತ್ರಿಗಳು ಹೇಳಿರುವುದು ಸಂವಿಧಾನ ಚೌಕಟ್ಟಿನ ಬಗ್ಗೆ ಇವರಿಗೆ ತಿಳಿವಳಿಕೆ ಇಲ್ಲವೆಂಬುದು ಸ್ಪಷ್ಟವಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.
ಈಗಾಗಲೇ ಕೇಂದ್ರದಿಂದ ಸಾಕಷ್ಟು ನೆರವು ಸಿಕ್ಕಿದೆ. ನೆರೆ ಪೀಡಿತರ ಪರಿಹಾರಕ್ಕೆ ಕೈಗೊಂಡ ಕಾಮಗಾರಿಗಳ ಬಗ್ಗೆ ಸರ್ಕಾರ ಮಾಹಿತಿ ಒದಗಿಸಿಲ್ಲ. ಹೆಚ್ಚಿನ ನೆರವಿನ ಅಗತ್ಯವಿದ್ದರೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಹೇಳಿದ ಅವರು, ರಾಯಚೂರಿನಲ್ಲಿ ಪರಿಹಾರ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರೇ ಆರೋಪಿಸಿದ್ದಾರೆ. ಹೀಗಿದ್ದರೂ ಸರ್ಕಾರ ಉದಾಸೀನ ಧೋರಣೆ ಅನುಸರಿಸುತ್ತಿದೆ ಎಂದರು.