ಅಕ್ರಮ ಗಣಿಗಾರಿಕೆ ಸಂಸತ್ನಲ್ಲಿ ಧ್ವನಿ ಎತ್ತುವೆ: ದೇವೇಗೌಡ
ಬೆಂಗಳೂರು, ಸೋಮವಾರ, 23 ನವೆಂಬರ್ 2009( 15:42 IST )
ಅಕ್ರಮ ಗಣಿಗಾರಿಕೆಯ ಕುರಿತು ರಾಜ್ಯದಲ್ಲಿ ಬಿಸಿ ಬಿಸಿ ಚರ್ಚೆ ಆಗುತ್ತಿರುವ ಈ ಸಂದರ್ಭದಲ್ಲಿ ಈ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಹಿಡಿದು ಗಣಿ ಸಂಪತ್ತನ್ನು ಲೂಟಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹಾಗಾಗಿಯೇ ಗಣಿಗಾರಿಕೆ ಕುರಿತಂತೆ ಸಂಸತ್ನಲ್ಲಿ ಪ್ರಸ್ತಾಪಿಸುವುದಾಗಿ ದೇವೇಗೌಡರು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ನಮ್ಮ ಬಳಿ ಬೇಕಾದಷ್ಟು ದಾಖಲೆಗಳಿವೆ ಎಂದ ಅವರು ಅಧಿವೇಶನದಲ್ಲಿ ಈ ಬಗ್ಗೆ ತಕರಾರು ತೆಗೆದು ಎಲ್ಲಾ ದಾಖಲೆಗಳನ್ನು ಪ್ರದರ್ಶಿಸುತ್ತೇನೆ ಎಂದು ಗುಡುಗಿದ್ದಾರೆ.
ಅಲ್ಲದೆ ಅಕ್ರಮ ಗಣಿಗಾರಿಕೆಯ ವಿವರವನ್ನು ಸಂಸತ್ತಿನಲ್ಲಿ ತಿಳಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತೇನೆ ಎಂದು ಗೌಡರು ಗುಡುಗಿದರು.