ಗಣಿ ಹಗರಣ ಹಾಗೂ ತಾನು ವಹಿಸಿರುವ ರಾಜಕೀಯ ಮೌನ ಸೇರಿದಂತೆ ಎಲ್ಲ ವಿಚಾರಗಳನ್ನು ಡಿ.14ರಿಂದ ಆರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಬಹಿರಂಗಪಡಿಸುವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಈಗಾಗಲೇ ಎಲ್ಲ ಹೇಳಿದರೆ, ವಿಧಾನಸಭಾ ಅಧಿವೇಶನದಲ್ಲಿ ಪ್ರತಿಪಕ್ಷದವರಿಗೆ ಹೇಳಲು ಏನೂ ಉಳಿಯಲಿಲ್ಲ. ಹೀಗಾಗಿ ಅಧಿವೇಶನದಲ್ಲಿ ಎಲ್ಲಾ ವಿಚಾರವನ್ನು ಬಹಿರಂಗಪಡಿಸುವೆ ಎಂದು ಹೇಳಿದರು.
ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವುದು ಮೊದಲೇ ತಿಳಿದಿತ್ತು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಯಾವ ಚುನಾವಣೆಯಲ್ಲಿ ಈ ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿಲ್ಲ ಎಂಬುದನ್ನು ನೀವೇ ಹೇಳಿ ಎಂದು ಸುದ್ದಿಗಾರರಿಗೆ ಪ್ರಶ್ನೆ ತೂರಿಬಿಟ್ಟ ಯಡಿಯೂರಪ್ಪನವರು ಕಳೆದ ಲೋಕಸಭಾ ಚುನಾವಣೆಯಲ್ಲೂ ಈ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.
ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದು ಖಚಿತ. ಸಭಾಪತಿ, ಉಪಸಭಾಪತಿ ಆಯ್ಕೆಗೆ ಪಕ್ಷಕ್ಕೆ ಬೇಕಾಗಿರುವ ಬಹುಮತವನ್ನು ನಾವು ಪಡೆಯುವುದು ಖಚಿತ ಎಂದು ಹೇಳಿದರು.