ಕರ್ನಾಟಕವನ್ನು ಗುಡಿಸಲು ಮುಕ್ತ ರಾಜ್ಯವನ್ನಾಗಿಸಲು ಸರ್ಕಾರ ಮಹತ್ವದ ಯೋಜನೆ ರೂಪಿಸಿದ್ದು, ಅದನ್ನು ಸಮರ್ಪಕವಾಗಿ ಜಾರಿಗೆ ತರಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯವು ವಿಕಾಸಸೌಧದಲ್ಲಿ ಹಮ್ಮಿಕೊಂಡಿದ್ದ ಕೊಳಚೆ ಪ್ರದೇಶಗಳ ನಕ್ಷೆ ರಚನೆ ಮತ್ತು ಕೊಳಚೆ ಪ್ರದೇಶದ ಕುಟುಂಬಗಳ ಜೀವನೋಪಾಯ ಸಮೀಕ್ಷೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನರ್ಮ್, ಇಂದಿರಾ ಆವಾಸ್, ರಾಜೀವ್ ಗಾಂಧಿ ವಸತಿ ಯೋಜನೆಯಡಿ ಕೊಳೆಗೇರಿ ಪ್ರದೇಶಗಳನ್ನು ಅಭಿವೃದ್ದಿ ಪಡಿಸಲು ಯೋಜಿಸಲಾಗಿದೆ ಎಂದರು. ದೇಶದಲ್ಲೇ ಪ್ರಥಮ ಬಾರಿಗೆ ಇಂತಹ ಸಮೀಕ್ಷೆ ನಡೆಸಲಾಗುತ್ತಿದೆ. ಇದು ಈ ಮೊದಲೇ ಆಗಬೇಕಿತ್ತು. ಆದರೆ, ಈಗಲಾದರೂ ಈ ಕಾರ್ಯ ಕೈಗೊಂಡ ಕೀರ್ತಿ ನಮ್ಮ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಸುರೇಶ್ ಕುಮಾರ್ ಹೇಳಿದರು.