ರಾಜ್ಯ ಹೈಕೋರ್ಟ್ ಆದೇಶದಂತೆ ಮಾರ್ಚ್ 30ರೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಲು ಸಿದ್ಧರಿದ್ದೇವೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಹೈಕೋರ್ಟ್ ತೀರ್ಪಿನಂತೆ ಆಯೋಗ ವಾರ್ಡ್ಗಳ ಪರಿಷ್ಕೃತ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಇಂದು ಬಿಡುಗಡೆ ಮಾಡಬೇಕಿದ್ದು, ಸೋಮವಾರ ಅಧಿಕೃತವಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕಿದೆ.
ಈ ಪಟ್ಟಿ ಸೋಮವಾರ ಚುನಾವಣಾ ಆಯೋಗಕ್ಕೆ ತಲುಪಿದ ಕೂಡಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ನ್ಯಾಯವಾದಿ ಕೆ.ಎನ್.ಫಣೀಂದ್ರ ತಿಳಿಸಿದ್ದಾರೆ.
ಚುನಾವಣೆಗೆ ಆಯೋಗ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಪರಿಷ್ಕೃತ ಪಟ್ಟಿ ಕೈ ತಲುಪುತ್ತಿದ್ದಂತೆ ಚುನಾವಣೆಗೆ ಅಗತ್ಯವಿರುವ ಶಾಲಾ ಕೊಠಡಿ, ಸಿಬ್ಬಂದಿ, ಪೊಲೀಸ್ ರಕ್ಷಣೆ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳನ್ನು ಸರ್ಕಾರದಿಂದ ಕೋರಲಾಗುವುದು ಎಂದು ಆಯೋಗದ ಅಧಿಕೃತ ಮೂಲಗಳು ತಿಳಿಸಿವೆ.
ಏತನ್ಮಧ್ಯೆ ಪರಿಷ್ಕೃತ ಪಟ್ಟಿ ಸಲ್ಲಿಸಲು ಸಮಯಾವಕಾಶ ಕೋರಿ ರಾಜ್ಯ ಸರ್ಕಾರ ಶುಕ್ರವಾರ ಮತ್ತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈಗಾಗಲೇ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿತ್ತು.