ಕುಡಿಯುವ ನೀರಿನ ದರ ಏರಿಕೆಗೆ ಆಡಳಿತಾರೂಢ ಬಿಜೆಪಿ ಸರ್ಕಾರ ಮುಂದಾಗಿರುವ ಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಚುನಾವಣೆ ಮುಗಿಯುತ್ತಿದ್ದಂತೆ ನೀರು ದರ ಏರಿಕೆಗೆ ಸರ್ಕಾರ ಮುಂದಾಗುವ ಮೂಲಕ ಜನರಿಗೆ ಮೋಸ ಮಾಡಿದೆ ಎಂದು ಆರೋಪಿಸಿದ್ದಾರೆ.
ಬಿಬಿಎಂಪಿ ಚುನಾವಣೆ ಮುನ್ನವೇ ಸರ್ಕಾರದ ಕಪಟತನದ ಬಗ್ಗೆ ಜನರಿಗೆ ನೀಡಿದ್ದ ಮುನ್ಸೂಚನೆ ನಿಜವಾಗಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ವಾಗ್ದಾಳಿ ನಡೆಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ಸಂಕಷ್ಟದ ಸ್ಥಿತಿಯಲ್ಲಿರುವಾಗಲೇ ಕುಡಿಯುವ ನೀರಿನ ದರ ಹೆಚ್ಚಿಸಲು ಸರ್ಕಾರ ಮುಂದಾಗಿರುವುದು ದುರ್ದೈವದ ಸಂಗತಿ ಎಂದು ಟೀಕಿಸಿದರು. ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.