ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ಇದೀಗ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ತೀವ್ರ ಲೆಕ್ಕಾಚಾರದಲ್ಲಿ ತೊಡಗಿದೆ. ಒಂದೊಮ್ಮೆ ಫಲಿತಾಂಶ ತಮ್ಮ ನಿರೀಕ್ಷೆಗೆ ತಕ್ಕಂತೆ ಬಾರದಿದ್ದರೆ ಅನುಸರಿಸಬೇಕಾದ ತಂತ್ರಗಳ ಕುರಿತು ಮೂರು ಪಕ್ಷಗಳಲ್ಲಿ ಗಹನ ಚರ್ಚೆಗಳು ನಡೆಯುತ್ತಿವೆ.
ಮತದಾನದ ನಂತರ ಮೂರ್ನಾಲ್ಕು ದಿನ ವಿಶ್ರಾಂತಿ ಮೂಡಿನಲ್ಲಿದ್ದ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಮತ ಎಣಿಕೆಗೆ ಒಂದು ದಿನ ಬಾಕಿ ಇರುವಂತೆ ಬಿರುಸಿನ ಚಟುವಟಿಕೆಗಳಲ್ಲಿ ನಿರತವಾಗಿದೆ. ಪಾಲಿಕೆಯ ಗದ್ದುಗೆ ಹಿಡಿಯಲು 126 ಸದಸ್ಯ ಬಲ ಬೇಕಿರುವುದರಿಂದ ಇದಕ್ಕೆ ಬೇಕಾಗಿರುವ ತಂತ್ರಗಾರಿಕೆಯನ್ನು ಸಿದ್ಧಪಡಿಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಮತದಾರರಲ್ಲಿ ತೆರಳಿ ಮನವಿ ಮಾಡಿದ್ದೇವೆ. ಅವರ ಆಶೀರ್ವಾದವೇ ನಮಗೆ ಶ್ರೀರಕ್ಷೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಬಿಜೆಪಿಯೂ ಹೊರತಾಗಿಲ್ಲ. ರಾಜ್ಯ ಸರ್ಕಾರ ಇದುವರೆಗೆ ಮಾಡಿರುವ ಸಾಧನೆಗಳುಇ ಹಾಗೂ ಬೆಂಗಳೂರು ಅಭಿವೃದ್ದಿ ಯೋಜನೆಗಳನ್ನು ಮತದಾರರು ಗಮನಿಸಿದ್ದಾರೆ. ಬಿಜೆಪಿಯಿಂದ ಮಾತ್ರ ಅಭಿವೃದ್ದಿ ಸಾಧ್ಯ ಎಂಬುದು ಮನಗಂಡಿದ್ದಾರೆ ಎಂದು ತಿಳಿಸಿದ್ದಾರೆ ಸಾರಿಗೆ ಸಚಿವ, ಬೆಂಗಳೂರು ಉಸ್ತುವಾರಿ ಸಚಿವ ಆರ್. ಅಶೋಕ್.
ಇವರೆಡು ಪಕ್ಷಗಳ ಜುಟ್ಟು ಹಿಡಿದಿರುವ ಜೆಡಿಎಸ್ ಕೂಡ ಹಿಂದೆ ಬಿದ್ದಿಲ್ಲ. ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನಮ್ಮ ಸಹಕಾರ ಬಯಸಿದರೆ ಬಿಗಿ ಧೋರಣೆ ತೋರುತ್ತೇವೆ ಎಂಬುದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.