ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಗೆ ಬೆಂಗಳೂರಿನ ಮತದಾರರು ಆಶೀರ್ವಾದ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಐದು ವರ್ಷಗಳಲ್ಲಿ ಜನರ ಋಣ ತೀರಿಸುತ್ತೇವೆ. ಆದರೆ ಮತದಾರ ಪ್ರಭು ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ತಿರಸ್ಕರಿಸಿರುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬಿಬಿಎಂಪಿ ಚುನಾವಣೆಯಲ್ಲಿ ಮೊತ್ತ ಮೊದಲ ಬಾರಿಗೆ ಆಡಳಿತ ಚುಕ್ಕಾಣಿ ಹಿಡಿದಿರುವ ಕುರಿತು ಖಾಸಗಿ ಚಾನೆಲ್ ಟಿವಿ9 ಜೊತೆ ಮಾತನಾಡಿದ ಅವರು, ಮತದಾರರು ಬಿಜೆಪಿಗೆ ಬಿಬಿಎಂಪಿ ಅಧಿಕಾರದ ಗದ್ದುಗೆ ಏರಲು ಸ್ಪಷ್ಟ ಜನಾದೇಶ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ನವರು ಮತದಾರರ ತೀರ್ಪನ್ನು ಒಪ್ಪಿಕೊಳ್ಳಬೇಕು. ಅದನ್ನು ಬಿಟ್ಟು ಅನಾವಶ್ಯಕವಾಗಿ ಟೀಕೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಕಿಡಿಕಾರಿದ್ದಾರೆ.
ಅಲ್ಲದೇ 2012ರ ವೇಳೆಗೆ ನಗರಕ್ಕೆ ಸಾಕಾಗುವಷ್ಟು ವಿದ್ಯುತ್ ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಈ ಸಂದರ್ಭದಲ್ಲಿ ಹೇಳಿದರು. ವಿಪಕ್ಷಗಳಿಂದ ಕೇವಲ ಟೀಕೆಗಳಿಂದಲೇ ಕಾಲ ಹರಣ ಮಾಡುತ್ತಿವೆ ಎಂದು ತಮ್ಮ ಮಾತಿನುದ್ದಕ್ಕೂ ವಾಗ್ದಾಳಿ ನಡೆಸಿದರು.
ಮತದಾರರ ಕೊಟ್ಟ ತೀರ್ಪನ್ನೇ ಧಿಕ್ಕರಿಸಿ ಮಾತನಾಡುವುದು ಕಾಂಗ್ರೆಸ್ ಮತ್ತು ಜೆಡಿಎಸ್ಗೆ ಶೋಭೆ ತರುವ ವಿಚಾರವಲ್ಲ, ಬಿಬಿಎಂಪಿ ಮತದಾರ ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ಸ್ಪಷ್ಟವಾಗಿ ನಿರಾಕರಿಸಿ, ಬಿಜೆಪಿ ಕೈ ಹಿಡಿದಿದ್ದಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.