11 ಬಿಜೆಪಿ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಸುಪ್ರೀಂಕೋರ್ಟ್ ವಿವರಣೆ ಕೇಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಅನರ್ಹ ಶಾಸಕರ ಪ್ರಕರಣದ ಕುರಿತಂತೆ ರಾಜ್ಯ ಹೈಕೋರ್ಟ್ ಸ್ಪೀಕರ್ ಅವರ ಅನರ್ಹತೆ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ 11 ಮಂದಿ ಬಿಜೆಪಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಈ ಬಗ್ಗೆ ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠದ ನ್ಯಾಯಮೂರ್ತಿಗಳಾದ ಸಿರಿಯಾಕ್ ಜೋಸೆಫ್ ಮತ್ತು ಅಲ್ತಾಮಸ್ ಅವರು, ಮುಖ್ಯಮಂತ್ರಿ ಯಡಿಯೂರಪ್ಪ, ಸ್ಪೀಕರ್ ಬೋಪಯ್ಯ ಅವರಿಗೆ ನೋಟಿಸ್ ನೀಡಿ ಒಂದು ವಾರದೊಳಗೆ ಉತ್ತರಿಸುವಂತೆ ಸೂಚನೆ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದಲ್ಲಿ ವಿಶ್ವಾಸವಿಲ್ಲ ಎಂದು ಬಂಡಾಯ ಸಾರಿದ್ದ 11 ಮಂದಿ (ಐವರು ಪಕ್ಷೇತರರ ಅನರ್ಹತೆ ವಿಚಾರಣೆ ಕೂಡ ಈಗ ಸುಪ್ರೀಂಕೋರ್ಟ್ನಲ್ಲಿದೆ)ಯನ್ನು ಶಾಸಕ ಸ್ಥಾನದಿಂದ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಅನರ್ಹಗೊಳಿಸಿದ್ದರು. ಈ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು. ಅಲ್ಲಿ ಸಾಕಷ್ಟು ವಾದ-ವಿವಾದ ನಡೆದು ಕೊನೆಗೂ ಸ್ಪೀಕರ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.
ಅಂತಿಮ ಹೋರಾಟ ಎಂಬಂತೆ ಜಿದ್ದಿಗೆ ಬಿದ್ದಿರುವ ಅನರ್ಹ ಶಾಸಕರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂನಲ್ಲಿ ಅನರ್ಹ ಶಾಸಕರ ಹೋರಾಟಕ್ಕೆ ಜಯ ದೊರೆಯುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.