ಜೀವ ಬೆದರಿಕೆ-ಸಿಎಂ, ಶೋಭಾಗೆ ರಕ್ಷಣೆ ನೀಡಿ: ಉಗ್ರಪ್ಪ ಮನವಿ
ಬೆಂಗಳೂರು, ಗುರುವಾರ, 3 ಫೆಬ್ರವರಿ 2011( 11:15 IST )
ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಉನ್ನತ ಮಟ್ಟದ ಭದ್ರತೆ ನೀಡಿ, ಮಾಟ ಮಾಡಿರುವವರನ್ನು ಕೂಡಲೇ ಬಂಧಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಪ್ರಾಣ ಬೆದರಿಕೆ ಇರುವ ಬಗ್ಗೆ ಮಾಹಿತಿ ಪಡೆದು ಸೂಕ್ತ ರಕ್ಷಣೆ ನೀಡಬೇಕೆಂದು ಮಾಜಿ ಶಾಸಕ ವಿ.ಎಸ್.ಉಗ್ರಪ್ಪ, ರಾಮಚಂದ್ರಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಮನೋಹರ್, ಪ್ರಮೋದ್ ಶಂಕರ, ಗೋವಿಂದರಾಜ್ ಅವರನ್ನೊಳಗೊಂಡ ನಿಯೋಗ ಹೈಗ್ರೌಂಡ್ಸ್ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಮುಖ್ಯಮಂತ್ರಿಗೆ ಮಾಟ-ಮಂತ್ರ ಮಾಡಿದವರು ಯಾರು? ಅವರ ಪ್ರಾಣಕ್ಕೆ ಸಂಚಕಾರ ತಂದೊಡ್ಡಿರುವವರು ಯಾರು? ಎಂಬುದನ್ನು ಪತ್ತೆ ಮಾಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.
ಯಡಿಯೂರಪ್ಪ ಅವರಿಗೆ ಮಾಟ-ಮಂತ್ರ ಮಾಡಿದವರನ್ನು ಹಾಗೂ ಸಚಿವೆ ಶೋಭಾ ಕರಂದ್ಲಾಜೆಗೆ ಜೀವ ಬೆದರಿಕೆ ಒಡ್ಡಿದವರನ್ನು ಕೂಡಲೇ ಬಂಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.