ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹರದನಹಳ್ಳಿ ದೊಡ್ಡೇಗೌಡ ದೇವೇಗೌಡರು ಬುಧವಾರ ತಮ್ಮ 79ನೇ ಹುಟ್ಟು ಹಬ್ಬದ ಸಂಭ್ರಮ ಆಚರಿಸಿಕೊಂಡರು.
ಪ್ರತಿವರ್ಷದಂತೆ ಈ ಬಾರಿಯೂ ಕುಟುಂಬವರ್ಗದ ಜತೆ ಸರಳವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಧಾರ ದೇವೇಗೌಡರದ್ದು. ಇಂದು ಬೆಳಿಗ್ಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸ್ನೇಹಿತರು ಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದರು.
ಇಂದು ಬೆಳಿಗ್ಗೆ ಮೇಲುಕೋಟೆಗೆ ತೆರಳಿ ಯೋಗ ನರಸಿಂಹಸ್ವಾಮಿ ಮತ್ತು ಚೆಲುವನಾರಾಯಣಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದ ಅಹೋಬಿಲ ಮಠದಲ್ಲಿ ಮಲೋಲ ಲಕ್ಷ್ಮೀನರಸಿಂಹ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು. ನಂತರ ಅವರು ನಾರಾಯಣ ಯತೀಂದರ ಶ್ರೀಗಳ ಆಶೀರ್ವಾದ ಪಡೆದು ಬೆಂಗಳೂರಿಗೆ ವಾಪಸಾಗಲಿದ್ದಾರೆ. ಆನಂತರ ಬೆಂಗಳೂರಿನಿಂದ ನವದೆಹಲಿಗೆ ತೆರಳುತ್ತಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ದೇವೇಗೌಡರು 1933 ಮೇ 18ರಂದು ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದ್ದರು. ಮೂಲತಃ ಸಿವಿಲ್ ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪದವಿ ಪಡೆದಿರುವ ಅವರು 1953ರಲ್ಲಿ ರಾಜಕೀಯ ಪ್ರವೇಶ. 1991ರಲ್ಲಿ ಮೊದಲ ಬಾರಿಗೆ ಹಾಸನ ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾದರು. 1994ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 1996ರಲ್ಲಿ ತೃತೀಯರಂಗದ ನಾಯಕರಾಗಿ ಆಯ್ಕೆಯಾಗಿ ದೇಶದ ಪ್ರಧಾನಿ ಹುದ್ದೆ ಅಲಂಕರಿಸಿದ್ದರು.