ಅಕ್ರಮ ಗಣಿಗಾರಿಕೆ ವಿವಾದಗಳ ಹಿನ್ನೆಲೆಯಲ್ಲಿ ಬಿಜೆಪಿ ರೆಡ್ಡಿ ಸಹೋದರರಿಂದ ವಿಮುಖವಾಗುತ್ತಿದೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರೆಡ್ಡಿ ಸಹೋದರರು ಯಾವುದೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿಲ್ಲ. ಅವರು ಅಪ್ಪಟ ಪ್ರಾಮಾಣಿಕ ವ್ಯಕ್ತಿಗಳಾಗಿದ್ದಾರೆ ಎಂದು ಪ್ರಮಾಣ ಪತ್ರ ನೀಡಿದ್ದಾರೆ.
ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ರೆಡ್ಡಿ ಸಹೋದರರ ವಿರುದ್ಧ ಯಾವ ಕ್ರಮ ತೆಗುಕೊಳ್ಳತ್ತೀರಿ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ರೆಡ್ಡಿ ಸಹೋದರರು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದರು.
ಲೋಕಾಯುಕ್ತರು ಅಕ್ರಮ ಗಣಿಗಾರಿಕೆ ಬಗ್ಗೆ ಶೀಘ್ರದಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಿದ್ದಾರೆ. ವರದಿಯಲ್ಲಿ ಆರೋಪಿಗಳೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ನನ್ನ ಪ್ರಕಾರ ರೆಡ್ಡಿ ಸಹೋದರರ ವಿರುದ್ಧ ಯಾವುದೇ ಆರೋಪಗಳಿಲ್ಲ. ಲೋಕಾಯುಕ್ತರ ಅಂತಿಮ ವರದಿಗಾಗಿ ಕಾಯುತ್ತಿದ್ದೇನೆ. ಅಕ್ರಮ ಗಣಿಗಾರಿಕೆ ವಿವಾದಗಳಿಂದಾಗಿ ರೆಡ್ಡಿ ಸಹೋದರರಿಂದ ದೂರವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.