ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ಜೈಲಿಗೆ ಹೋದ್ರೂ ಆಡಳಿತ ನಡೆಸ್ತಾರೆ: ಎಚ್ಡಿಕೆ (BJP | Yeddyurappa | Kumaraswamy | JDS | Lokayukta | Illegal mining Report)
ಯಡಿಯೂರಪ್ಪ ಜೈಲಿಗೆ ಹೋದ್ರೂ ಆಡಳಿತ ನಡೆಸ್ತಾರೆ: ಎಚ್ಡಿಕೆ
ಬೆಂಗಳೂರು, ಸೋಮವಾರ, 25 ಜುಲೈ 2011( 15:37 IST )
ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ಅಂತಿಮ ವರದಿಯನ್ನು ಸರ್ಕಾರಕ್ಕೆ ಅಧಿಕೃತವಾಗಿ ಸಲ್ಲಿಸಿದ ನಂತರವೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ನಿರೀಕ್ಷಿಸುವುದು ತಪ್ಪು. ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ವರದಿ ಸೋರಿಕೆಯಿಂದಾಗಿ ಸಿಎಂ ಹೆಸರಿರುವುದು ಖಚಿತವಾಗಿದೆ. ಹಾಗಂತ ಅವರು ರಾಜೀನಾಮೆ ನೀಡುತ್ತಾರೆ ಎಂದು ನಿರೀಕ್ಷಿಸಿದರೆ ನೂರಕ್ಕೆ ನೂರರಷ್ಟು ಭ್ರಮನಿರಸನಗೊಳ್ಳಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.
ಬಿ.ಎಸ್.ಯಡಿಯೂರಪ್ಪನವರಿಗೆ ಅಧಿಕಾರ ದಾಹ ಹೆಚ್ಚಾಗಿದ್ದು, ಅವರು ಜೈಲಿಗೆ ಹೋದರೂ ಕೂಡ ತಾನು ಅಲ್ಲಿಂದಲೇ ಆಡಳಿತ ನಡೆಸುತ್ತೇನೆ ಎನ್ನುತ್ತಾರೆ. ತನಗೆ ಐದು ವರ್ಷಗಳ ಕಾಲ ಆಡಳಿತ ನಡೆಸಿ ಎಂದು ಜನ ತೀರ್ಪು ನೀಡಿದ್ದಾರೆ. ಹಾಗಾಗಿ ತಾನು ಜೈಲಿನಿಂದ್ಲೇ ಅಧಿಕಾರ ನಡೆಸುತ್ತೇನೆ ಎಂದು ಹೇಳಿದರೂ ಅಚ್ಚರಿಪಡಬೇಕಾಗಿಲ್ಲ ಎಂದು ಟೀಕಿಸಿದರು.
ಗಣಿಗಾರಿಕೆಯಲ್ಲಿ ಯಡಿಯೂರಪ್ಪ ಶಾಮೀಲಾಗಿರುವುದು ಸ್ಪಷ್ಟವಾಗಿದ್ದರೂ ಕೂಡ ಅವರು ರಾಜೀನಾಮೆ ಕೊಡಲ್ಲ. ಒಂದು ವೇಳೆ ಬಿಜೆಪಿ ಹೈಕಮಾಂಡ್ಗೆ ಏನಾದರು ನೈತಿಕತೆ ಇದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಲೋಕಾಯುಕ್ತರು ಬುಧವಾರ (ಜು.27) ಸರ್ಕಾರಕ್ಕೆ ಅಧಿಕೃತವಾಗಿ ಅಕ್ರಮ ಗಣಿಗಾರಿಕೆ ಕುರಿತ ಅಂತಿಮ ವರದಿ ಸಲ್ಲಿಸಲಿದ್ದಾರೆ. ಏತನ್ಮಧ್ಯೆ ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ಮುಖಂಡರು ಯಡಿಯೂರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಹೇಳುವ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ಅನುಸರಿಸುತ್ತಿರುವ ಬೆಳವಣಿಗೆಯೂ ನಡೆಯುತ್ತಿರುವುದಾಗಿ ಆರೋಪಿಸಿದರು.