ರಾಜಕೀಯ ಕೆಸರೆರಚಾಟ ಯಾವ ಮಟ್ಟಕ್ಕೆ ತಲುಪುತ್ತದೆ? ಇದೋ ಇಲ್ಲಿ ನೋಡಿ. ಕರ್ನಾಟಕದಲ್ಲಿ ಪಕ್ಷವನ್ನು ಕಟ್ಟಲು ಬಿಜೆಪಿಯು ಪಾಕಿಸ್ತಾನದ ಕುಖ್ಯಾತ ಬೇಹುಗಾರಿಕಾ ಏಜೆನ್ಸಿ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ)ನಿಂದ ಹಣಕಾಸು ನೆರವು ಪಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವುದಾಗಿ ಲೋಕಾಯುಕ್ತ ವರದಿಯಲ್ಲಿ ಹೆಸರಿಸಲ್ಪಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಸಂಪುಟ ಸಹೋದ್ಯೋಗಿಗಳ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರು, ಸೋಮವಾರ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ "ಕಾಂಗ್ರೆಸ್ ನಡಿಗೆ ಜನರ ಬಳಿಗೆ" ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಆರೋಪ ಮಾಡಿದರು.
ಬಳ್ಳಾರಿ ಜಿಲ್ಲೆಯ ಗಣಿಗಳಲ್ಲಿರುವ ನೈಸರ್ಗಿಕ ಸಂಪತ್ತನ್ನು ಪಾಕಿಸ್ತಾನಕ್ಕೆ ಹಡಗಿನ ಮೂಲಕ ರವಾನಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಐಎಸ್ಐನಿಂದ ಅಕ್ರಮವಾಗಿ ಪಡೆದಿರುವ ಹಣವನ್ನು ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಲು ಬಳಸಲಾಗುತ್ತಿದೆ ಎಂದು ಆರೋಪಿಸಿದರು.