ಗಣಿ ವರದಿ: ಸರಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿಲ್ಲ: ಹೆಗ್ಡೆ
ಬೆಂಗಳೂರು, ಬುಧವಾರ, 27 ಜುಲೈ 2011( 10:18 IST )
PR
ಅಕ್ರಮ ಗಣಿಗಾರಿಕೆ ವರದಿಯನ್ನು ಸಲ್ಲಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಆದರೆ, ಗಣಿ ವರದಿ ಬಗ್ಗೆ ಸರಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿಲ್ಲ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ನಡೆಸಿದ ಕಂಪೆನಿಗಳ ಹೆಸರುಗಳು ಹಾಗೂ ರಫ್ತು ಮಾಡಿದ ವಿವರಗಳು ಸೇರಿದಂತೆ ಭ್ರಷ್ಟಾಚಾರ ನಡೆಸಿದ ಸುಮಾರು 600 ಅಧಿಕಾರಿಗಳು ಹೆಸರುಗಳನ್ನು ಉಲ್ಲೇಖಿಸಲಾಗಿದೆ ಎಂದು ಇಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಪ್ರಭಾವಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಪ್ರಭಾವಿಗಳ ಕೂಟ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದೆ. ವರದಿಯನ್ನು ಇಂದು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ವಿವರಣೆ ನೀಡಿದ್ದಾರೆ.
ಒಂದು ವೇಳೆ ಸರಕಾರ ಅಕ್ರಮ ಗಣಿಗಾರಿಕೆ ವರದಿಯನ್ನು ಸ್ವೀಕರಿಸದಿದ್ದಲ್ಲಿ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗುವುದು. ರಾಜ್ಯದ ಯಾರೊಬ್ಬರು ಕೂಡಾ ವರದಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೂಲಕ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಬಹುದಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.