ಭ್ರಷ್ಟಾಚಾರದ ಆರೋಪದ ಮೇಲೆ ಮುಖ್ಯಮಂತ್ರಿಯೊಬ್ಬರು ರಾಜೀನಾಮೆ ನೀಡಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು. ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆಯಿಂದ ರಾಜ್ಯಕ್ಕೆ ಅಂಟಿದ್ದ ಶಾಪ ವಿಮೋಚನೆ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು.
ಭಾನುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಮೂರು ವರ್ಷಗಳಲ್ಲಿ ಬರೇ ಅಭಿವೃದ್ಧಿ ಹೇಳಿಕೆ ನೀಡಿದ್ದು ಬಿಟ್ಟರೆ, ಯಾವುದೇ ಕಾರ್ಯ ಕಾರ್ಯಗತವಾಗಿಲ್ಲ.ರಾಜ್ಯದ ಸಂಪತ್ತು ಲೂಟಿ ಮಾಡಿರುವುದೇ ಸರ್ಕಾರದ ಸಾಧನೆಯಾಗಿದೆ ಎಂದರು.
ರಾಜ್ಯದಲ್ಲಿ ಕೋಮುಶಕ್ತಿಗಳಿಗೆ ಬೆಂಬಲ, ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದಾರೆ. ಶಿಕ್ಷಣ ರಂಗವನ್ನು ಕೇಸರೀಕರಣಗೊಳಿಸಲು ಸರ್ವಪ್ರಯತ್ನ ಮಾಡಿದ್ದಾರೆ. ಕೈಗಾರಿಕಾ ಪ್ರಗತಿ ಹೆಸರಿನಲ್ಲಿ ರೈತರ ಫಲವತ್ತಾದ ಕೃಷಿ ಜಮೀನನ್ನು ಸ್ವಾಧೀನಪಡಿಸಿಕೊಂಡು ರೈತರನ್ನು ಬೀದಿಪಾಲು ಮಾಡಿದ್ದಾರೆ ಎಂದು ಆರೋಪಿಸಿದರು.
ತಾವು ಹೇಳಿದಂತೆ ಎಲ್ಲವೂ ನಡೆಯಬೇಕೆನ್ನುವ ಯಡಿಯೂರಪ್ಪನವರ ಕರಸರತ್ತು ಇನ್ನು ಮುಂದೆ ನಡೆಯುವುದಿಲ್ಲ. ಲೋಕಾಯುಕ್ತ ನ್ಯಾ.ಹೆಗ್ಡೆ ನೀಡಿರುವ ವರದಿ ಹಿನ್ನೆಲೆಯಲ್ಲಿ ಯಡಿಯೂರಪ್ಪ ಮತ್ತು ಅವರ ಕುಟುಂಬ ಮತ್ತು ರೆಡ್ಡಿ ಸಹೋದರರು ಜೈಲಿಗೆ ಹೋಗುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.