ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಶೋಭಾ ಕರಂದ್ಲಾಜೆಗೆ ಜೆಡಿಎಸ್ ಘೇರಾವ್-ಜಟಾಪಟಿ: ಲಾಠಿ ಪ್ರಹಾರ (Shobha karandlaje | JDS | BJP | Health center | JDS Protest | Karnataka News | Bangalore News,)
ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಉದ್ದೇಶಪೂರ್ವಕವಾಗಿ ಜೆಡಿಎಸ್ ಸದಸ್ಯೆಯ ಹೆಸರು ಹಾಕಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಇಂಧನ ಸಚಿವೆ ಶೋಭಾ ಕರಂದ್ಲಾಜೆಗೆ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶನ ಮಾಡಿದ ಘಟನೆ ಶನಿವಾರ ದೊಡ್ಡಬಿದರಕಲ್ನಲ್ಲಿ ನಡೆಯಿತು.
ಶೋಭಾ ಕರಂದ್ಲಾಜೆ ಕ್ಷೇತ್ರವಾದ ಯಶವಂತಪುರದ ದೊಡ್ಡಬಿದರಕಲ್ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆಗೆ ಮುದ್ರಿಸಿದ್ದ ಆಹ್ವಾನ ಪತ್ರಿಕೆಯಲ್ಲಿ ಆ ಭಾಗದ ಸ್ಥಳೀಯ ಬಿಬಿಎಂಪಿ ವಾರ್ಡ್ನ ಜೆಡಿಎಸ್ ಸದಸ್ಯೆ ಗಾಯತ್ರಿ ಜವರೇಗೌಡ ಅವರ ಹೆಸರನ್ನು ಮುದ್ರಿಸಿಲ್ಲವಾಗಿತ್ತು.
ಇಂದು ಬೆಳಿಗ್ಗೆ ಉದ್ಘಾಟನೆಗೆ ಸಚಿವೆ ಶೋಭಾ ಕರಂದ್ಲಾಜೆ ಆಗಮಿಸಿದ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶೋಭಾ ಸಮಜಾಯಿಷಿ ನೀಡಲು ಹೋದಾಗ ಮಾತಿನ ಚಕಮಕಿ ನಡೆಯಿತು. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಆದರೂ ಪಟ್ಟು ಬಿಡದ ಜೆಡಿಎಸ್ ಕಾರ್ಯಕರ್ತರು ಶೋಭಾ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಉದ್ಘಾಟನೆಗೆ ಅಡ್ಡಿ ಪಡಿಸಲು ಯತ್ನಿಸಿದರು. ಆಗ ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಶೋಭಾ ಕರಂದ್ಲಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ ನೆರವೇರಿಸಿದರು.