ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಹೈದರಾಬಾದ್ ಚಂಚಲಗುಡ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಭಾವ ಶ್ರೀನಿವಾಸ ರೆಡ್ಡಿಯವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಅಕ್ಟೋಬರ್ 17ರವರೆಗೆ ವಿಸ್ತರಿಸಿದೆ.
ಪ್ರತ್ಯೇಕ ತೆಲಂಗಾಣ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ತೀವ್ರ ಹೋರಾಟ ನಡೆಯುತ್ತಿದ್ದು, ಭದ್ರತೆಯ ಹಿನ್ನೆಲೆಯಲ್ಲಿ ಇಂದು ಜನಾರ್ದನ ರೆಡ್ಡಿಯವರನ್ನು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ಸಿಬಿಐ ಪರ ವಕೀಲರು ನ್ಯಾಯಾಧೀಶ ನಾಗಮಾರುತಿ ಶರ್ಮಾ ಅವರಲ್ಲಿ ಮನವಿ ಮಾಡಿಕೊಂಡರು.
ಹಾಗಾಗಿ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸಿ, ಬಂಧನದ ಅವಧಿಯನ್ನು ಅ.17ರವರೆಗೆ ವಿಸ್ತರಿಸಿರುವುದಾಗಿ ಹೇಳಿದರು. ಆ ನಿಟ್ಟಿನಲ್ಲಿ ಜನಾರ್ದನ ರೆಡ್ಡಿ ಬಂಧನ ಮುಕ್ತವಾಗುವ ಆಸೆಗೆ ತಣ್ಣೀರೆರಚಿದಂತಾಗಿದೆ.
ಅಕ್ರಮ ಗಣಿಗಾರಿಕೆ ಆರೋಪದಡಿಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿಯವರನ್ನು ಸೆ.13ರಿಂದ ಆರು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು. ಅಲ್ಲದೇ ಈ ಅವಧಿ ಮುಕ್ತಾಯದ ನಂತರ ಸಿಬಿಐ ಕೋರ್ಟ್ಗೆ ಹಾಜರುಪಡಿಸಿದಾಗ, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಸಿಬಿಐ ಕಸ್ಟಡಿಗೆ ನೀಡಬೇಕೆಂಬ ಮನವಿಯನ್ನೂ ಕೋರ್ಟ್ ತಿರಸ್ಕರಿಸಿ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿತ್ತು. ಆ ಅವಧಿ ಇಂದು (ಅ.3) ಮುಕ್ತಾಯಗೊಂಡ ನಿಟ್ಟಿನಲ್ಲಿ ಮತ್ತೆ ರೆಡ್ಡಿದ್ವಯರಿಗೆ ಬಂಧನದ ಅವಧಿಯನ್ನು ವಿಸ್ತರಿಸಿದೆ.
ರಾಜ್ಯದಲ್ಲಿ ರೆಡ್ಡಿ ವಿರುದ್ಧ ಎರಡು ಪ್ರಕರಣ ದಾಖಲು: ಏತನ್ಮಧ್ಯೆ ಅಕ್ರಮ ಗಣಿಗಾರಿಕೆ ಪ್ರಕರಣದ ಕುರಿತಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕರ್ನಾಟಕದಲ್ಲಿಯೂ ಎರಡು ಪ್ರಕರಣ ದಾಖಲು ಮಾಡಲಾಗಿದೆ ಎಂದು ಸಿಬಿಐ ಜಂಟಿ ನಿರ್ದೇಶಕ ಲಕ್ಷ್ಮಿನಾರಾಯಣ ತಿಳಿಸಿದ್ದಾರೆ.