ಆ ಮಕ್ಕಳು ಎಂದಿನಂತೆ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದಾರೆ. ಆದರೆ ಮನೆಗೆ ಹೋಗಿದ್ದೇ ತಡ, ವಾಂತಿ-ಬೇಧಿಯಿಂದ ನರಳತೊಡಗಿದರು. ಹೀಗಾಗಿ ಅಸ್ವಸ್ಥ ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿಲಕಲನೇರ್ಪು ಗ್ರಾಮದ ಸಬರಮತಿ ಅನುದಾನಿತ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 28 ಮಕ್ಕಳು ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಬಾಗೇಪಲ್ಲಿ ತಾಲ್ಲೂಕಿನ ಚೇಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಹದಿಮೂರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಉಳಿದ ಮಕ್ಕಳು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.