ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ವಿಷ್ಣು ನಿಧನ: ಆತ್ಮಹತ್ಯೆಗೆ ಯತ್ನ-ಗಾಳಿಯಲ್ಲಿ ಗುಂಡು (Vishnuvardhan No More | Kannada Film Actor | Vishnu Sena | Kannada Cinema Artist)
ಸುದ್ದಿ/ಗಾಸಿಪ್
Bookmark and Share Feedback Print
 
PR
ಸಾಹಸ ಸಿಂಹ ವಿಷ್ಣುವರ್ಧನ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಜನಸಾಗರ ಹರಿದು ಬರುತ್ತಿದ್ದು, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿರುವ ನಡುವೆಯೇ ಅಭಿಮಾನಿಯೊಬ್ಬ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಜನರ ನಿಯಂತ್ರಣ ಹತೋಟಿ ತಪ್ಪಿದ ಕಾರಣ ಕಾಲ್ತುಳಿತ ಪ್ರಕರಣ ನಡೆದಿದೆ. ಓರ್ವ ಅಭಿಮಾನಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಸಾರ್ವಜನಿಕರು ಆತನನ್ನು ಹಿಡಿದು ಆತ್ಮಹತ್ಯೆ ಯತ್ನ ವಿಫಲಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಷ್ಣು ಅವರ ಪಾರ್ಥಿವ ಶರೀರ ಇಟ್ಟ ನ್ಯಾಶನಲ್ ಕಾಲೇಜು ಮೈದಾನ ಸಮೀಪ ಜನಸಾಗರವೇ ತುಂಬಿದ್ದು, ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದರೆ, ಮತ್ತೊಂದೆಡೆ ಅಭಿಮಾನಿಗಳು ಉದ್ರಿಕ್ತಗೊಂಡ ಪರಿಣಾಮ ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ್ದಾರೆ.

ಪರಿಸ್ಥಿತಿ ಉದ್ರಿಕ್ತವಾದ ಹಿನ್ನೆಲೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲಾಗಿದ್ದು, ಲಘು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗಿಸುವ ಮೂಲಕ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದ ಸಂದರ್ಭ ಕೆಲವರು ಗಾಯಗೊಂಡಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ.

ಸುಮಾರು ಎರಡು ಕಿ.ಮೀ.ವರೆಗೂ ಜನಸಾಗರ ತುಂಬಿದ್ದು ಪರಿಸ್ಥಿತಿ ಹತೋಟಿ ಮೀರಿ ಹೋಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಭಿಮಾನಿಗಳು ಯಾವುದೇ ಕಾರಣಕ್ಕೂ ಅಹಿತಕರ ಘಟನೆಗೆ ಮುಂದಾಗಬಾರದೆಂದು ಭಾರತಿ ವಿಷ್ಣುವರ್ಧನ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿರುವ ನಡುವೆಯೇ ಈ ಘಟನೆ ನಡೆದಿದೆ.

ನಟಸಾರ್ವಭೌಮ ಡಾ.ರಾಜ್ ಕುಮಾರ್ ಅವರು ಸಾವನ್ನಪ್ಪಿದ ಸಂದರ್ಭದಲ್ಲಿಯೂ ಕೂಡ ಸಾಕಷ್ಟು ಪ್ರಾಣಹಾನಿ, ಗಲಭೆ ನಡೆದಿರುವುದನ್ನು ಇಲ್ಲಿ ಸ್ಮರಿಸಬಹುದು. ಇದೀಗ ವಿಷ್ಣು ಸಾವಿನ ಸಂದರ್ಭದಲ್ಲಿಯೂ ಅಂತಹ ಘಟನೆ ನಡೆಯುವ ಸಾಧ್ಯತೆ ಇರುವ ಲಕ್ಷಣ ಇರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಿಷ್ಣುವರ್ಧನ್, ಕನ್ನಡ ಸಿನಿಮಾ, ಪೊಲೀಸ್, ಗಲಭೆ, ಯಡಿಯೂರಪ್ಪ