ದೇಶದ ಆರ್ಥಿಕ ಸ್ಥಿತಿ ಸುಧಾರಣೆಗೆ ಮತ್ತಷ್ಟು ಬಡ್ಡಿ ದರ ಕಡಿತಗೊಳಿಸಬೇಕು ಎನ್ನುವ ಬ್ಯಾಂಕ್ಗಳ ಬೇಡಿಕೆಯ ಹಿನ್ನೆಲೆಯಲ್ಲಿ, ದೇಶದ ಆರ್ಥಿಕ ಸ್ಥಿತಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಗಮನಿಸುತ್ತಿದ್ದು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಆರ್ಬಿಐ ಗವರ್ನರ್ ಸುಬ್ಬಾರಾವ್ ಹೇಳಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸುಬ್ಬಾರಾವ್, ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ ಮತ್ತು ವಿತ್ತ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು,ಆರ್ಥಿಕ ಬಿಕ್ಕಟ್ಟಿನ ಹಂತದಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಕುಸಿತದಿಂದ ದೇಶದ ಆರ್ಥಿಕ ಸ್ಥಿತಿಗತಿ ಕುರಿತಂತೆ ಪ್ರಧಾನಿಯವರ ನೇತೃತ್ವದ ಸಮಿತಿಯೊಂದಿಗೆ ಸಭೆಯಲ್ಲಿ ಚರ್ಚಿಸಿದ ನಂತರ ದೇಶದಲ್ಲಿ ನಗದು ಹಣ ಚಲಾವಣೆಗೆ ಹೆಚ್ಚಿನ ಹಣವನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಬಿಡುಗಡೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಸಭೆಯಲ್ಲಿ ಆರ್ಥಿಕ ಬಿಕ್ಕಟ್ಟು ನಿವಾರಣೆಗೆ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ರೆಪೊ, ರಿವರ್ಸ್ ರೆಪೊ ಕಡಿತ ಸೇರಿದಂತೆ ಮತ್ತಿತರ ಸೂಕ್ತ ಕ್ರಮಗಳಿಂದ ಬ್ಯಾಂಕ್ಗಳಿಗೆ ನಗದುಹಣ ಚಲಾವಣೆಗಾಗಿ ಹೆಚ್ಚಿನ ಹಣಕಾಸಿನ ನೆರವನ್ನು ಬಿಡುಗಡೆ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ ಎಂದು ಗವರ್ನರ್ ಸುಬ್ಬಾರಾವ್ ತಿಳಿಸಿದ್ದಾರೆ. |