ಜಾಗತಿಕ ಆರ್ಥಿಕ ಕುಸಿತದಿಂದಾಗಿ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕ್ಷೇತ್ರಗಳಿಗೆ ಪರಿಹಾರ ಪ್ಯಾಕೇಜ್ ಘೋಷಿಸಲು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಸಮಿತಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಹಣಕಾಸು, ರಫ್ತು ಮತ್ತು ಗೃಹನಿರ್ಮಾಣ ಕ್ಷೇತ್ರಗಳಿಗೆ ವಾರಂತ್ಯದೊಳಗೆ ಪರಿಹಾರ ಪ್ಯಾಕೇಜ್ ಘೋಷಿಸಲು ಕೇಂದ್ರ ಸರಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಸಮ್ಮತಿ ಸೂಚಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಹೆಚ್ಚುವರಿಯಾಗಿ ವಿತ್ತ ಖಾತೆಯನ್ನು ವಹಿಸಿಕೊಂಡ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್, ನೂತನವಾಗಿ ಅಧಿಕಾರ ವಹಿಸಿಕೊಂಡ ಗೃಹಖಾತೆ ಸಚಿವ ಪಿ,ಚಿದಂಬರಂ, ಆರ್ಬಿಐ ಗವರ್ನರ್ ಡಿ.ಸುಬ್ಬಾರಾವ್, ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಅವರೊಂದಿಗೆ ವಿವಿಧ ಕ್ಷೇತ್ರಗಳ ಸಮಸ್ಯೆಗಳ ಕುರಿತಂತೆ ಚರ್ಚಿಸಿದರು.
ಅಕ್ಟೋಬರ್ ತಿಂಗಳಲ್ಲಿ ರಫ್ತು ವಹಿವಾಟು ಶೇ.12 ರಷ್ಟು ಇಳಿಕೆ ಕಂಡಿದ್ದು, ಅಟೋಮೊಬೈಲ್ ಕ್ಷೇತ್ರ ಸೇರಿದಂತೆ ಅನೇಕ ಕ್ಷೇತ್ರಗಳ ವಹಿವಾಟು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಸರ್ವೋಚ್ಚ ಸಮಿತಿ ಸಭೆ ಸೇರಿ ಪ್ಯಾಕೇಜ್ ಘೋಷಿಸಲು ನಿರ್ಧರಿಸಿದೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ. |