ಜಾಗತಿಕ ಆರ್ಥಿಕ ಕುಸಿತದಿಂದಾಗಿ ಕಂಗಾಲಾದ ರಫ್ತು ವಹಿವಾಟುದಾರರಿಗೆ ಬೆಂಬಲ ನೀಡಲು ಬಜೆಟ್ನಲ್ಲಿ ರಿಯಾಯತಿಗಳನ್ನು ಘೋಷಿಸಲು ಸರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಆನಂದ್ ಶರ್ಮಾ ಹೇಳಿದ್ದಾರೆ.
ರಫ್ತು ವಹಿವಾಟು ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಕೇಂದ್ರ ಹಣಕಾಸು ಖಾತೆ ಸಚಿವರ ಜೊತೆ ಚರ್ಚೆ ನಡೆಸಲಾಗುತ್ತಿದೆ. ಅದರಲ್ಲಿ ಕೆಲ ನೀತಿಗಳನ್ನು ಮುಂಬರುವ ಬಜೆಟ್ನಲ್ಲಿ ಘೋಷಿಸಲಾಗುವುದು ಎಂದು ಸಚಿವ ಶರ್ಮಾ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಕುಸಿತದಿಂದಾಗಿ ಎದುರಾಗಿರುವ ಸಮಸ್ಯೆಗಳ ಕುರಿತಂತೆ ಚರ್ಚಿಸಲು ರಫ್ತು ಕೈಗಾರಿಕೋದ್ಯಮ ಸಂಘಟನೆಗಳೊಂದಿಗೆ ಸಂವಾದ ನಡೆಸಿ ಕ್ಷೇತ್ರದ ಪುನಶ್ಚೇತನಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನು ಮುಂಬರುವ ಕೆಲ ವಾರಗಳಲ್ಲಿ ಅಥವಾ ತಿಂಗಳುಗಳಲ್ಲಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಆದಾಗ್ಯೂ ವಿದೇಶಿ ನೇರ ಬಂಡವಾಳ ಹೂಡಿಕೆ ನೀತಿಗಳಲ್ಲಿರುವ ವಿವಾದಾತ್ಮಕ ನೀತಿಗಳನ್ನು ಪರಿಷ್ಕರಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಶರ್ಮಾ ಸ್ಪಷ್ಟಪಡಿಸಿದ್ದಾರೆ.
56 ವರ್ಷ ವಯಸ್ಸಿನ ಸಚಿವ ಶರ್ಮಾ ಹಿಂದಿನ ಸರಕಾರದಲ್ಲಿ ವಿದೇಶಾಂಗ ಇಲಾಖೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಆಸಿಯಾನ್ ಮತ್ತು ದಕ್ಷಿಣ ಕೊರಿಯಾ ದೇಶಗಳ ಹಾಗೂ ಭಾರತ-ನೇಪಾಳ ನಡುವಣ ಮುಕ್ತ ವ್ಯಾಪಾರ ಒಪ್ಪಂದಗಳ ಕುರಿತಂತೆ ಚರ್ಚೆ ಮುಕ್ತಾಯವಾಗಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಚಿವ್ ಶರ್ಮಾ ತಿಳಿಸಿದ್ದಾರೆ. |