ಏರ್ ಇಂಡಿಯಾ ಆಡಳಿತ ಮಂಡಳಿಗೆ ಸ್ವತಂತ್ರ ನಿರ್ದೇಶಕರನ್ನು ನೇಮಕಗೊಳಿಸುವ ಸಂಬಂಧ ಚರ್ಚೆ ನಡೆಸಲು ನಾಗರಿಕ ವಿಮಾನಯಾನ ಖಾತೆ ಸಚಿವ ಪ್ರಫುಲ್ ಪಟೇಲ್ ಈ ವಾರ ಪ್ರಧಾನ ಮಂತ್ರಿಯವರನ್ನು ಭೇಟಿಯಾಗಲಿದ್ದು, ರಾಷ್ಟ್ರೀಯ ವಿಮಾನಯಾನ ಸಂಸ್ಥೆಯು ಶೀಘ್ರದಲ್ಲೇ ಪುನಶ್ಚೇತನಗೊಳ್ಳುವ ನಿರೀಕ್ಷೆಗಳಿವೆ.
"ನಾವು ಶೀಘ್ರದಲ್ಲೇ ಸ್ವತಂತ್ರ ನಿರ್ದೇಶಕರ ಮಂಡಳಿಯನ್ನು ಅಸ್ತಿತ್ವಕ್ಕೆ ತರಲಿದ್ದೇವೆ. ಅದಕ್ಕಾಗಿ ಈ ವಾರ ನಾನು ಪ್ರಧಾನಿ ಮನಮೋಹನ್ ಸಿಂಗ್ರನ್ನು ಕೂಡ ಭೇಟಿಯಾಗಿ, ಸಂಭಾವ್ಯ ಹೆಸರುಗಳ ಬಗ್ಗೆ ಚರ್ಚೆ ನಡೆಸಲಿದ್ದೇನೆ" ಎಂದು ಎಐಎಂಎ ಕಾರ್ಯಕ್ರಮದ ನಂತರ ಪತ್ರಕರ್ತರ ಜತೆ ಮಾತನಾಡುತ್ತಾ ಪಟೇಲ್ ತಿಳಿಸಿದ್ದಾರೆ.
ವಿಮಾನಯಾನ ಸಂಸ್ಥೆಯ ಗತಿಯನ್ನು ಬದಲಾಯಿಸಲು ಸಾಕಷ್ಟು ಸಮಯ ಮತ್ತು ಅರ್ಥಪೂರ್ಣ ಕೊಡುಗೆಯನ್ನು ನೀಡುವ ಭರವಸೆ ಹೊಂದಿರುವವರ ಹೆಸರುಗಳ ಬಗ್ಗೆ ಪ್ರಧಾನಿಯವರ ಜತೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮುಂತಾದ ದಿಗ್ಗಜರನ್ನು ಏರ್ ಇಂಡಿಯಾ ತೆಕ್ಕೆಗೆ ಸೆಳೆದುಕೊಳ್ಳುವ ತಂತ್ರವನ್ನು ಸರಕಾರ ಮಾಡುತ್ತಿದೆ ಎಂದು ಕೆಲವು ದಿನಗಳ ಹಿಂದಷ್ಟೇ ಮಾಧ್ಯಮಗಳು ವರದಿ ಮಾಡಿದ್ದವು. ಇನ್ನು ಕೆಲವೇ ದಿನಗಳಲ್ಲಿ ನಿಜ ವಿಚಾರ ಬಹಿರಂಗವಾಗುವ ನಿರೀಕ್ಷೆಯಿದೆ.
|