ದ್ವಿಚಕ್ರ ವಾಹನ ತಯಾರಿಕೆಯಲ್ಲಿ ವಿಶ್ವದಲ್ಲಿಯೇ ಮುಂಚೂಣಿಯಲ್ಲಿರುವ ಹೀರೋ ಹೊಂಡಾ ಕಂಪನಿ ಕರ್ನಾಟಕದಲ್ಲಿ ತನ್ನ ಕೈಗಾರಿಕಾ ಘಟಕ ಸ್ಥಾಪಿಸಲು ಮುಂದಾಗಿದೆ.
ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹೀರೋ ಹೊಂಡಾ ಕಂಪನಿ ಮುಖ್ಯಸ್ಥರು ಮಂಗಳವಾರ ಭೇಟಿ ಮಾಡಿ ಕರ್ನಾಟಕದಲ್ಲಿ ಘಟಕ ಪ್ರಾರಂಭಿಸುವ ಬಗ್ಗೆ ಚರ್ಚೆ ನಡೆಸಿದರು.
ಕರ್ನಾಟಕದಲ್ಲಿ ಟೊಯೋಟಾ, ವೋಲ್ವೊ ಸೇರಿದಂತೆ ಪ್ರತಿಷ್ಠಿತ ಕಂಪನಿಗಳು ತಲೆ ಎತ್ತಿವೆ. ಅಂತೆಯೇ ರಾಜ್ಯದ ಯಾವುದೇ ಪ್ರದೇಶದಲ್ಲಿ ಘಟಕ ಪ್ರಾರಂಭಿಸಿದರೆ ಅಗತ್ಯ ಮೂಲ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾತುಕತೆ ವೇಳೆ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶೀಘ್ರದಲ್ಲಿಯೇ ಹೀರೋ ಹೊಂಡಾ ಕಂಪನಿಯ ತಂಡವನ್ನು ಕರ್ನಾಟಕಕ್ಕೆ ಕಳುಹಿಸಲು ಕಂಪನಿಯ ಮುಖ್ಯಸ್ಥರು ಸಮ್ಮತಿಸಿದ್ದಾರೆ ಎಂದು ತಿಳಿಸಿದೆ.