ಪ್ರಸಕ್ತ ವರ್ಷದಲ್ಲಿ ಮುಂಗಾರು ಮಳೆ ಉತ್ತಮವಾಗಿರಲಿದೆ ಎನ್ನುವ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದರಿಂದ, ಮುಂಬರುವ ದಿನಗಳಲ್ಲಿ ಹಣದುಬ್ಬರ ಇಳಿಕೆಯಾಗುವ ಸಾಧ್ಯತೆಗಳಿವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಉಪಗವರ್ನರ್ ಹೇಳಿದ್ದಾರೆ.
ಮುಂಗಾರು ಮಳೆ ಉತ್ತಮವಾಗಿರುವುದರಿಂದ ಉತ್ಪಾದನೆಯಲ್ಲಿ ಹೆಚ್ಚಳವಾಗುವುದರಿಂದ ಹಣದುಬ್ಬರ ಇಳಿಕೆಗೆ ನೆರವಾಗಲಿದೆ.ಹಣದುಬ್ಬರ ಬಿಕ್ಕಟ್ಟು ಮುಂಗಾರು ಮಳೆಯೊಂದಿಗೆ ಸುಧಾರಣೆಯಾಗಲಿದೆ ಎಂದು ಆರ್ಬಿಐ ಉಪಗವರ್ನರ್ ಕೆ.ಸಿ.ಚಕ್ರವರ್ತಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ಕಳೆದ ಏಪ್ರಿಲ್ 20 ರಂದು ನಡೆಸಿದ ಆರ್ಥಿಕ ಪರಿಷ್ಕರಣ ಸಭೆಯಲ್ಲಿ ಪ್ರಸಕ್ತ ವರ್ಷಾಂತ್ಯಕ್ಕೆ ಹಣದುಬ್ಬರ ದರ ಶೇ.5.5ಕ್ಕೆ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿಕೆ ನೀಡಿತ್ತು.
ದೇಶದ ಬಹುತೇಕ ಕೃಷಿಕರು ಮುಂಗಾರು ಮಳೆಯ ಮೇಲೆ ಅವಲಂಬಿತರಾಗಿದ್ದಾರೆ. ಮುಂಗಾರು ಮಳೆ ಪ್ರಸಕ್ತ ವರ್ಷ ಉತ್ತಮವಾಗಿರಲಿದೆ ಎಂದು ಭಾರತದ ಹವಾಮಾನ ಇಲಾಖೆ ಶುಕ್ರವಾರದಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.