ರಾಜಧಾನಿಯ ಮಧ್ಯಭಾಗದಲ್ಲಿ ಪ್ರತಿಭಟನಾಕಾರರು ಹಿಂಸಾಚಾರ ಹಾಗೂ ಕಲ್ಲು ತೂರಾಟದಲ್ಲಿ ನಿರತರಾಗಿದ್ದರಿಂದ, ಪ್ರತಿಭಟನಾಕಾರರನ್ನು ಚದುರಿಸಲು ಭಧ್ರತಾ ಪಡೆಗಳು ನಡೆಸಿದ ಗೋಲಿಬಾರ್ನಲ್ಲಿ ಐದು ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ,
ನಗರದ ವಿವಿಧ ಭಾಗಗಳಿಗೆ ಹಿಂಸಾಚಾರ ವಿಸ್ತರಿಸಿದ್ದು, ಹಲವಾರು ಅಧಿಕಾರಿಗಳು ಗಾಯಗೊಂಡಿದ್ದು, ಸುಮಾರು 300ಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಅನಾಮಧೇಯರಾಗಿರಲು ಬಯಸಿದ ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಾದವರಲ್ಲಿ ವಿರೋಧ ಪಕ್ಷದ ನಾಯಕ ಮಿರ್ ಹೊಸೈನ್ ಮೌಸಾವಿಯವರ ಸೋದರಳಿಯ ಕೂಡಾ ಸೇರಿದ್ದಾನೆ ಎಂದು ಮೌಸಾವಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಪ್ರತಿಭಟನಾಕಾರರು ಹಿಂಸಾಚಾರಕ್ಕೆ ಇಳಿದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.