ನವದೆಹಲಿ: ಜಮ್ಮು ಹಾಗೂ ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ ಹಿಡಿತಕ್ಕೆ ಬಾರದಿರುವ ಹಿನ್ನೆಲೆಯಲ್ಲಿ, ಪರಿಹಾರ ಕಂಡುಕೊಳ್ಳುವ ಸಲುವಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜಕೀಯ ಪಕ್ಷಗಳ ಉನ್ನತ ನಾಯಕರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ.
ಸಭೆಯಲ್ಲಿ ಜಮ್ಮುವಿನ ಪರಿಸ್ಥಿತಿ ಶಾಂತಗೊಳಿಸಲು ಕೈಗೊಳ್ಳಬೇಕಿರುವ ಕ್ರಮಗಳು ಮತ್ತು ಈ ವಿವಾದವನ್ನು ಅಂತ್ಯಗೊಳಿಸಲು ಒಮ್ಮತದ ಅಭಿಪ್ರಾಯವನ್ನು ಮೂಡಿಸಲು ಪ್ರಯತ್ನಿಸಲಾಗುವುದು.
ಅಮರನಾಥ ಮಂದಿರ ಮಂಡಳಿಗೆ ಭೂಮಿ ಹಸ್ತಾಂತರ ವಿಚಾರ ಕುರಿತು ಉದ್ಭವಿಸಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಅಭಿಪ್ರಾಯವನ್ನು ಸಂಗ್ರಹಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.
ಸರ್ವಪಕ್ಷಗಳ ಸಭೆಗೆ ಎಲ್ಲಾ ರಾಜಕೀಯ ಪಕ್ಷಗಳ ಉನ್ನತ ನಾಯಕರನ್ನು ಆಮಂತ್ರಿಸಲಾಗಿದ್ದು, ಸಭೆಯಲ್ಲಿ ಸರಕಾರವು ಇದುವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲಿದೆ ಮತ್ತು ರಾಜ್ಯ ಹಾಗೂ ರಾಷ್ಟ್ರದಲ್ಲಿ ಕೋಮು ಸೌಹಾರ್ದ ಉಂಟು ಮಾಡಲು ಎಲ್ಲಾ ಪಕ್ಷಗಳ ಸಹಕಾರವನ್ನು ಸರಕಾರ ಕೋರಲಿದೆ.
ರಾಷ್ಟ್ರೀಯ ಪಕ್ಷಗಳಲ್ಲದೆ, ನ್ಯಾಶನಲ್ ಕಾನ್ಫರೆನ್ಸ್ ಹಾಗೂ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ(ಪಿಡಿಪಿ) ಸೇರಿದಂತೆ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನೂ ಸಭೆಗೆ ಆಹ್ವಾನಿಸಲಾಗಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಹಾಗೂ ಇತರ ಪಕ್ಷಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಏತನ್ಮಧ್ಯೆ, ಜಮ್ಮುವಿನಲ್ಲಿ ಹಿಂಸಾಚಾರಕ್ಕೆ ಬಿಜೆಪಿ ಕಾರಣ ಎಂದು ಕಾಂಗ್ರೆಸ್ ದೂರಿದೆ. ಆದರೆ ಬಿಜೆಪಿಯು ಕೇಂದ್ರವು ಪ್ರತಿಭಟನಾಕಾರರೊಂದಿಗೆ ನೇರವಾಗಿ ಮಾತುಕತೆ ನಡೆಸುವುದರಿಂದ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ ಎಂದು ಹೇಳಿದೆ. ಅಲ್ಲದೆ ಸರಕಾರವು ಪ್ರತಿಭಟನಾಕಾರರನ್ನು ನಿರ್ವಹಿಸುವಲ್ಲಿ ಪ್ರಜಾಪ್ರಭುತ್ವ ನೀತಿಗಳನ್ನು ಅನುಸರಿಸುವುದಿಲ್ಲ ಎಂದು ಬಿಜೆಪಿ ದೂರಿದೆ.
|