ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಮಸೂದೆಯೊಂದರ ಮಂಡನೆ ಮಾತ್ರ ಸಾಲದು ಎಂದು ಹೇಳಿರುವ ಟಿಆರ್ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಅವರ ಪುತ್ರ ಕೆ.ಟಿ. ರಾಮರಾವ್, ಇದಕ್ಕಾಗಿ ಸಂಸತ್ತಿನಲ್ಲಿ ಮಸೂದೆಯೊಂದನ್ನು ಮಂಡಿಸುವಂತೆ ಒತ್ತಾಯಿಸಿದ್ದಾರೆ.
ಹೈದರಾಬಾದನ್ನು ತೆಲಂಗಾಣದಲ್ಲಿ ಸೇರಿಸದೇ ಇದ್ದರೆ ಟಿಆರ್ಎಸ್ ಇದನ್ನು ಸ್ವೀಕರಿಸದು ಎಂದೂ ಅವರು ಎಚ್ಚರಿಸಿದ್ದಾರೆ.
ವಿಧಾನಸಭೆಯಲ್ಲಿ ಮಸೂದೆ ಮಂಡನೆ ಸಾಲದು ಎಂದಿರುವ ರಾಮ ರಾವ್, ಸಂಸತ್ತಿನಲ್ಲಿ ಮಸೂದೆ ಅಂಗೀಕಾರವು ನಿಜವಾದ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.
ಆಂಧ್ರ ವಿಧಾನಸಭೆಯಲ್ಲಿ ಸೂಕ್ತ ಮಸೂದೆ ಮಂಡನೆಯ ಕುರಿತು ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಅವರ ಹೇಳಿಕೆಯನ್ನು ಸ್ವಾಗತಿಸಿದ ಅವರು ಕೇಂದ್ರವು ಈ ಕುರಿತು ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಬೇಕು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.