ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರದಲ್ಲಿ ಭಾರೀ ಬಿರುಗಾಳಿ ಸಂಭವಿಸಿದ್ದು ಕನಿಷ್ಟ 31 ಮಂದಿ ಸಾವನ್ನಪ್ಪಿದ್ದಾರೆ.
ರಾಯಗಂಜ್ ಪ್ರದೇಶದಲ್ಲಿ ಭಾರೀ ಬಿರುಗಾಳಿ ಎದ್ದಿದ್ದು, ಸುಮಾರು 31 ಮಂದಿಯನ್ನು ಬಲಿತೆಗೆದುಕೊಂಡರೆ, 100ಕ್ಕೂ ಹೆಚ್ಚು ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. 50,000ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ಸಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಮಯದಲ್ಲಿ ಪ್ರತಿ ವರ್ಷವೂ ಅಸ್ಸಾಂ, ಪಶ್ಚಿಮ ಬಂಗಾಳದ ಸುತ್ತಮುತ್ತಲ ಜನರು ಬಿರುಗಾಳಿಯ ಹೊಡೆತಕ್ಕೆ ಸಿಲುಕುವುದು ಸಾಮಾನ್ಯವೇ ಆದರೂ, ಈ ಬಾರಿ ಬಿರುಗಾಳಿಯ ತೀವ್ರತೆ ಹೆಚ್ಚಿದೆ. ಹೀಗಾಗಿ ಜನರಿಗೆ ಸುರಕ್ಷತಾ ದೃಷ್ಟಿಯಿಂದ ಸರ್ಕಾರ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಸಾವಿರಾರು ಕಟ್ಟಡಗಳು ಕುಸಿತವಾಗಿರುವುದರಿಂದ ಸಾವುನೋವಿನ ಸಂಖ್ಯೆಯಲ್ಲಿ ಇನ್ನೂ ಏರಿಕೆಯಾಗುವ ಸಂಭವವಿದೆ ಎಂದು ವರದಿಯಾಗಿದೆ.