ಲೋಕಪಾಲ ಮಸೂದೆಯ ಬಗ್ಗೆ ಪಕ್ಷದ ನಿಲುವು ಅಂತ್ಯಗೊಳಿಸುವ ಹಿನ್ನೆಲೆಯಲ್ಲಿ ನಡೆದ ಬಿಜೆಪಿ ಸಭೆ ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಯಿತು. ಭ್ರಷ್ಟಾಚಾರದ ವಿರುದ್ಧ ಪ್ರಬಲ ಹೋರಾಟ ನಡೆಸುವಲ್ಲಿ ವಿಫಲವಾಗಿ ಅಣ್ಣಾ ಹಜಾರೆಗೆ ಮೊರೆಹೋದ ಪಕ್ಷದ ನಾಯಕತ್ವವನ್ನು, ಹಿರಿಯ ನಾಯಕ ಹಾಗೂ ಸಂಸದ ಯಶವಂತ್ ಸಿನ್ಹಾ ಟೀಕಿಸಿದ್ದಾರೆ.
ನವದೆಹಲಿಯಲ್ಲಿ ನಡೆಯಲಿರುವ ಪಕ್ಷದ ಸಂಸದೀಯ ಸಭೆಯಲ್ಲಿ, ಒಂದು ವೇಳೆ ಭ್ರಷ್ಟಾಚಾರದ ವಿರುದ್ಧ ಹೋರಾಟ ತೀವ್ರಗೊಳಿಸುವ ನಿಟ್ಟಿನಲ್ಲಿ ಚರ್ಚಿಸದಿದ್ದಲ್ಲಿ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೆದರಿಕೆಯೊಡ್ಡಿದ್ದಾರೆ.
ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿದ್ದಲ್ಲಿ, ಭ್ರಷ್ಟಾಚಾರದ ವಿರುದ್ಧ ನಮ್ಮ ನಿಲುವನ್ನು ಜನತೆಗೆ ತಿಳಿಸುವ ಅಗತ್ಯವಿರುತ್ತಿರಲಿಲ್ಲ. ಒಂದು ವೇಳೆ, ಅಗತ್ಯವಾದಲ್ಲಿ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಸುತ್ತೇನೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ರಾಜ್ಯಸಭಾ ಸದಸ್ಯರಾದ ಎಸ್.ಎಸ್. ಆಹ್ಲುವಾಲಿಯಾ ಮಾತನಾಡಿ, ಕೇಂದ್ರ ಸರಕಾರ ದುರ್ಬಲ ಲೋಕಪಾಲ ಮಸೂದೆಯನ್ನು ಮಂಡಿಸುತ್ತಿರುವ ಹಿನ್ನೆಲೆಯಲ್ಲಿ, ಭ್ರಷ್ಟಾಚಾರದ ವಿರುದ್ಧದ ಅಣ್ಣಾ ಹಜಾರೆ ಹೋರಾಟಕ್ಕೆ ಪಕ್ಷ ಬೆಂಬಲ ನೀಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಹಿರಿಯ ಗಾಂಧಿವಾದಿ, ಸಮಾಜ ಸುಧಾರಕ ಅಣ್ಣಾ ಹಜಾರೆಯವರ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಒಂಬತ್ತನೆ ದಿನಕ್ಕೆ ಕಾಲಿರಿಸಿದ್ದರಿಂದ,ಆರೋಗ್ಯ ಹದಗೆಡುತ್ತಿದೆ. ಕೂಡಲೇ ನಿರಶನವನ್ನು ನಿಲ್ಲಿಸಬೇಕು ಎಂದು ಬಿಜೆಪಿ ಮವವಿ ಮಾಡಿದೆ
ಲೋಕಪಾಲ ಮಸೂದೆಯ ವ್ಯಾಪ್ತಿಯೊಳಗಿರಬೇಕು ಎನ್ನುವುದು ಪಕ್ಷದ ನಿಲುವಾಗಿದೆ. ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಕೂಡಾ ಲೋಕಪಾಲ ವ್ಯಾಪ್ತಿಯೊಳಗೆ ಬರಬೇಕು ಎನ್ನುವ ಬಗ್ಗೆ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.