ಜೆಡಿಎಸ್ ಮಾಜಿ ಶಾಸಕಿ ಪರಿಮಳಾ ನಾಗಪ್ಪರವರು ತಮ್ಮ ಬೆಂಬಲಿಗರೊಂದಿಗೆ ಶುಕ್ರವಾರ ಬಹುಜನ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬಿಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿಜಿಆರ್ ಸಿಂಧ್ಯಾ, ರಾಜ್ಯಸಭಾ ಸದಸ್ಯ ವೀರಸಿಂಗ್, ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಇವರೇ ಮೊದಲಾದ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆಗೊಂಡ ಪರಿಮಳಾರವರು, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ತಾವು ಈ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದರು.
ಈ ನಡುವೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವ ತಮ್ಮ ನಿರ್ಧಾರವನ್ನು ಪಿಜಿಆರ್ ಸಿಂಧ್ಯಾ ಪುನರುಚ್ಚರಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ತಾವು ಈ ನಿರ್ಧಾರ ಕೈಗೊಂಡಿರುವುದೇ ಹೊರತು ಅಭಿಮಾನಿಗಳು ಈ ಕುರಿತು ತಪ್ಪು ತಿಳಿಯಬಾರದು ಎಂದು ಅವರು ಹೇಳಿದ್ದಾರೆ.
ಪಕ್ಷದ ಅಭ್ಯರ್ಥಿಗಳ ಪಟ್ಟಿ ಮತ್ತು ಚುನಾವಣಾ ಪ್ರಣಾಳಿಕೆ ಎರಡೂ ಸಿದ್ಧಗೊಳ್ಳುತ್ತಿದ್ದು ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಬಹುಜನ ಸಮಾಜವಾದಿ ಪಕ್ಷದ ಚುನಾವಣಾ ಪ್ರಣಾಳಿಕೆ ಉಳಿದೆಲ್ಲ ರಾಜಕೀಯ ಪಕ್ಷಗಳದ್ದಕ್ಕಿಂತ ವಿಭಿನ್ನವಾಗಿರುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
|