ಚುನಾವಣೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ದಿಲ್ಲಿಯ ಹೈಕಮಾಂಡ್ ಗಮನ ಹರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸೋಮವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಈ ರೀತಿ ಮಾತನಾಡುವ ಮೂಲಕ ಅವರು, ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗರ ನಡುವೆ ಅಸಮಾಧಾನ ಇನ್ನೂ ಹೊಗೆಯಾಡುತ್ತಿದೆ ಎಂಬುದನ್ನು ಪರೋಕ್ಷವಾಗಿ ಬಿಂಬಿಸಿದರು.
ಟಿಕೆಟ್ ಆಕಾಂಕ್ಷಿಗಳ ಒತ್ತಡ ಹಿಂದೆಂದಿಗಿಂತ ಈ ಬಾರಿ ಹೆಚ್ಚಿದೆ. ನಿನ್ನೆ ದಾವಣಗೆರೆಯಲ್ಲಿ ನಡೆದ ರೈತರ ಬೃಹತ್ ಸಮಾವೇಶವೂ ಯಶಸ್ವಿಯಾಗಿದೆ. ಈ ಎರಡೂ ಅಂಶಗಳು ಕಾಂಗ್ರೆಸ್ ಪಕ್ಷದ ಗೆಲುವಿನ ಮುನ್ಸೂಚನೆಗಳಾಗಿವೆ ಎಂದು ಖರ್ಗೆ ಇದೇ ಸಂದರ್ಭದಲ್ಲಿ ಪ್ರತಿಪಾದಿಸಿದರು.
ಕೆಲವು ಸಂದರ್ಭಗಳಲ್ಲಿ ಅರ್ಹರಿಗೆ ಅವಕಾಶ ದೊರೆಯುವುದಿಲ್ಲ. ಆದರೆ ಪಕ್ಷದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಭಿನ್ನಾಭಿಪ್ರಾಯಗಳನ್ನು ಬದಿಗೆ ಸರಿಸಿ ದುಡಿದರೆ ಜಯ ನಿಶ್ಚಿತ ಎಂದು ಖರ್ಗೆ ಈ ಸಂದರ್ಭದಲ್ಲಿ ನುಡಿದರು.
|