ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಸಂಭವಿಸಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ವರ್ತೂರ್ ಪ್ರಕಾಶ್ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಉಪಚುನಾವಣೆಯಲ್ಲಿ ಹೊಂದಾಣೀಕೆ ಮಾಡಿಕೊಳ್ಳುವುದಾಗಿ ಹೇಳಿಕೆ ನೀಡುತ್ತಿವೆ. ಆದರೆ ಇದು ಸಾಧ್ಯವಿಲ್ಲ ಎಂದರು.
ಕುಮಾರಸ್ವಾಮಿ ಹಾಗೂ ದೇವೇಗೌಡರು ಹೀಗೆ ಹೇಳುತ್ತಲೇ ಕೊನೆ ಗಳಿಗೆಯಲ್ಲಿ 'ಕೈ' ಕೊಡುತ್ತಾರೆ. ಅವರನ್ನು ನಂಬಿ ಕಾಂಗ್ರೆಸ್ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಮುನ್ನಡೆಯದ ಕಾಂಗ್ರೆಸ್ ರಾಜ್ಯದಲ್ಲಿ ನೆಲಕಚ್ಚುವುದು ಖಚಿತವೆಂದರು.
ಸಿದ್ಧರಾಮಯ್ಯನವರಂತಹ ಒಬ್ಬ ಸಮರ್ಥ ನಾಯಕನಿಗೆ ಕಾಂಗ್ರೆಸ್ ಸೂಕ್ತ ಸ್ಥಾನಮಾನ ನೀಡದೇ ಮೂಲೆ ಗುಂಪು ಮಾಡಲು ಪ್ರಯತ್ನಿಸುತ್ತಿದೆ ಎಂದ ಅವರು, ಕಾಂಗ್ರೆಸ್ ಮುಖಂಡ ಸುದರ್ಶನ್ ನೀತಿ ಪಾಠ ಹೇಳಲು ಬರುತ್ತಿದ್ದಾರೆ. ಆದರೆ ಅವರು ಸಿದ್ದು ಬೆಂಬಲಿಗರಿಗೆ ನೀತಿ ಪಾಠ ಹೇಳುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ ಎಂದರು.
ಈ ಬಾರಿಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಕೂಡಾ ನೆಲಕಚ್ಚಲಿದೆ ಎಂದು ಭವಿಷ್ಯ ನುಡಿದರು. |