ರಾಜ್ಯದಲ್ಲಿ ಹೆಚ್ಚುತ್ತಿರುವ ಉಗ್ರರ ಚಟುವಟಿಕೆಗಳನ್ನು ಹತ್ತಿಕ್ಕಲು ಸುಸಜ್ಜಿತ ಸುರಕ್ಷತಾ ಆಯೋಗವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ತಿಳಿಸಿದರು.
ನಗರದ ಮೈಸೂರು ರಸ್ತೆಯ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಗರಿಕ ಸಮಾಜಕ್ಕೆ ಸವಾಲಾಗಿರುವ ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಮಾಡುವ ಘಟಕಕ್ಕೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.
ಭಯೋತ್ಪಾದನಾ ಚಟುವಟಿಕೆಗಳು ಅಧುನಿಕ ಅಪರಾಧ ಪ್ರಕರಣಗಳಿಂದ ಹಿಂದಿಗಿಂತ ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕಾಗಿದೆ. ಭಯೋತ್ಪಾದನೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪೊಲೀಸರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಕೆಲಸ ಆಗಬೇಕಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ಕೂಡ ದುಷ್ಟ ಶಕ್ತಿಯ ವಿರುದ್ಧ ಹೋರಾಡುವ ಪೊಲೀಸರಿಗೆ ಸಹಾನುಭೂತಿ ತೋರಬೇಕಾಗಿದೆ ಎಂದ ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ 97 ವಸತಿ ಸಮುಚ್ಚಯ ನಿರ್ಮಾಣಕ್ಕೆ 47 ಕೋಟಿ ರೂಪಾಯಿಗಳನ್ನು ಒದಗಿಸುವುದಾಗಿ ಹೇಳಿದರು. |