ರಾಜ್ಯ ಕಾಂಗ್ರೆಸ್ ಹೆಚ್ಚಿನ ಚೈತನ್ಯ ತುಂಬುವ ಹಾಗೂ ಕಳೆದ ಚುನಾವಣೆಯ ವೈಫಲ್ಯಗಳನ್ನು ಗುರುತಿಸುವ ನಿಟ್ಟಿನಲ್ಲಿ ಸತ್ಯಶೋಧನ ಸಮಿತಿಯೊಂದನ್ನು ರಚಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಪಕ್ಷದ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಕೆಪಿಸಿಸಿಗೆ ಮತ್ತೆ ಚೈತನ್ಯ ತುಂಬಲು ಅಗತ್ಯ ಕ್ರಮ ಕೈಗೊಂಡಿದ್ದು, ಬರುವ ತಿಂಗಳ 5ರಂದು ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಂದ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಕರೆದು ಮಾಹಿತಿ ಪಡೆಯಲು ಸಭೆಯೊಂದನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡ ಕ್ಷೇತ್ರಗಳ ಅಭ್ಯರ್ಥಿಗಳಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪರಾಭವಗೊಂಡ ಕ್ಷೇತ್ರಗಳಲ್ಲಿನ ಲೋಪದೋಷಗಳು, ಸೋಲಿಗೆ ಕಾರಣ ಕುರಿತು ಪತ್ತೆ ಹಚ್ಚುವ ನಿಟ್ಟಿನಲ್ಲಿ ಸತ್ಯ ಶೋಧನಾ ಸಮಿತಿ ರಚಿಸಲಾಗುವುದು ಎಂದು ತಿಳಿಸಿದ ಅವರು, ಈ ಸಮಿತಿ ಪ್ರತಿ ಕ್ಷೇತ್ರಕ್ಕೂ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದೆ ಎಂದಿದ್ದಾರೆ. |